ಮಂಗಳೂರು (ದಕ್ಷಿಣ ಕನ್ನಡ): ದ್ವೇಷ ಭಾಷಣ, ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ಗಳನ್ನು ಹಾಕುವವರ ವಿರುದ್ಧ ಕಾನೂನನ್ನು ಬಲಪಡಿಸುವ ಅಗತ್ಯವಿದೆ. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ಕಠಿಣ ಕಾನೂನು ಜಾರಿಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗೂಂಡೂರಾವ್ ಹೇಳಿದ್ದಾರೆ.
ಮಂಗಳೂರು ನಗರದ ಸರ್ಕ್ಯೂಟ್ ಹೌಸ್ನಲ್ಲಿ ಶನಿವಾರ ಸಾರ್ವಜನಿಕ ಅಹವಾಲು ಸಭೆಯ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಕೋಮು ಪ್ರಚೋದನೆಗಳಿಂದ ಅಮಾಯಕರ ಹತ್ಯೆಗೆ ಕಾರಣವಾಗುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಹಲ್ಲೆ, ಹತ್ಯೆ ಸೇರಿದಂತೆ ಕೋಮು ಗಲಭೆ ಹಾಗೂ ಪ್ರಚೋದನೆಯ ಕೃತ್ಯಗಳಲ್ಲಿ ತೊಡಗಿರುವವರು ಅಕ್ರಮ ಚಟುವಟಿಕೆಗಳಲ್ಲೂ ಭಾಗಿಯಾಗಿರುತ್ತಾರೆ. ಆದರೆ ಇಂತಹ ಪ್ರಕರಣಗಳಲ್ಲಿ ಸುಲಭವಾಗಿ ಜಾಮೀನು ದೊರೆಯುತ್ತದೆ. ಹಾಗಾಗಿ ಕಾನೂನಿನ ಭಯ ಇಲ್ಲಾಗಿದೆ. ಇದಕ್ಕಾಗಿ ಕಠಿಣ ಕಾನೂನಿನ ಅಗತ್ಯವಿದೆ ಎಂದವರು ಹೇಳಿದರು.