ಗುಂಡ್ಲುಪೇಟೆ: ಗ್ರಾಮೀಣ ಪ್ರದೇಶದ ಜನರಿಗೆ ಬಾಲ್ಯ ವಿವಾಹ, ಬಾಲ ಕಾರ್ಮಿಕ ಪದ್ದತಿ, ಮೋಟರ್ ವಾಹನ ಕಾಯ್ದೆಗಳ ಕುರಿತು ಗ್ರಾಮಗಳ ಮಟ್ಟದಲ್ಲಿ ಅರಿವು ಮೂಡಿಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಸವರಾಜ ತಳವಾರ ಸಲಹೆ ನೀಡಿದರು.
ಪಟ್ಟಣದ ತಾಲೂಕು ಕಚೇರಿ ಸಭಾ ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಯೋಜನೆಗಳು, ಬಾಲ್ಯ ವಿವಾಹ ನಿಷೇಧ ಕಾಯ್ದೆ-2006, ಫೆÇೀಕ್ಸೋ ಕಾಯ್ದೆ-2012 ಹಾಗೂ ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ-1986ರ ಕುರಿತು ತಾಲೂಕು ಮಟ್ಟದ ವಿವಿಧ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶದಲ್ಲಿ ಅತೀ ಹೆಚ್ಚು ಬಾಲ್ಯ ವಿವಾಹ ಪ್ರಕರಣಗಳು ಕಂಡು ಬರುತ್ತಿದೆ. ಇದರ ತಡೆಗೆ ಅಧಿಕಾರಿಗಳು ಸಾರ್ವಜನಿಕರ ಸಹಭಾಗಿತ್ವ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಗ್ರಾಮಾಂತರ ಪ್ರದೇಶದ ಮಕ್ಕಳಿಗೆ ಬಾಲ್ಯ ವಿವಾಹ, ಮೋಟರ್ ವಾಹನ ಕಾಯ್ದೆ, ಕಾರ್ಮಿಕ ಕಾಯ್ದೆ, ಫೆÇೀಕ್ಸೋ ಕಾಯ್ದೆ ಬಗ್ಗೆ ಅರಿವಿರುವುದಿಲ್ಲ. ಇಂತಹ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ, ಪ್ರಾಥಮಿಕ ಶಾಲಾ ಶಿಕ್ಷಕರು, ಗ್ರಾಪಂ ಪಿಡಿಓ ಹಾಗೂ ಸ್ಥಳೀಯ ಜನ ಪ್ರತಿನಿಧಿಗಳು ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿ ಫೆÇೀಷಕರಿಗೆ ಕಾಯ್ದೆಗಳ ಬಗ್ಗೆ ಅರಿವು ಮೂಡಿಸುವ ಮುಂದಾಗಬೇಕು. ಹೀಗಿದ್ದಲ್ಲಿ ಮಾತ್ರ ಗ್ರಾಮಾಂತರದಲ್ಲಿ ಕಾಯ್ದೆಗಳ ಉಲ್ಲಂಘನೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದರು.
ಬಾಲ್ಯ ವಿವಾಹ ತಡೆಯುವ ಅಧಿಕಾರ ಎಲ್ಲಾ ಇಲಾಖೆಗೂ ಇದೆ. ಬಾಲ್ಯ ವಿವಾಹದ ಸಂದರ್ಭದಲ್ಲಿ ಮದುವೆ ಮಾಡಿಸುವ ಪುರೋಹಿತ, ಶಾಮಿಯಾನ ಹಾಕುವವರು, ಛತ್ರ ಕೊಡುವವರು ಹೆಣ್ಣುಗೆ 18 ವರ್ಷ ಗಂಡಿಗೆ 21 ವರ್ಷ ವಯಸ್ಸಾಗಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಇಲ್ಲದಿದ್ದರೆ ಇದರಲ್ಲಿ ಭಾಗಿಯಾಗುವ ಪ್ರತಿಯೊಬ್ಬರು ಆರೋಪಿಗಳಾಗುತ್ತಾರೆ. 2006ರಲ್ಲಿ ಬಾಲ್ಯ ವಿವಾಹ ತಡೆ ಕಾನೂನು ಬಂದರು ಸಹ ಇನ್ನು ಹಳ್ಳಿಗಳಲ್ಲಿ ಬಾಲ್ಯ ವಿವಾಹ ಪ್ರಕರಣ ನಡೆಯುತ್ತಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ತಿಳಿಸಿದರು.
ಹಳ್ಳಿಗಳಲ್ಲಿ ಕಾನೂನು ಅರಿವು ಬಗ್ಗೆ ಕಾರ್ಯಕ್ರಮ ಏರ್ಪಡಿಸಿ ಕಾನೂನಿನ ಬಗ್ಗೆ ತಿಳಿಸಿದರೆ ಜನರಿಗೆ ಅಪರಾಧಗಳ ಬಗ್ಗೆ ತಿಳಿಯುತ್ತದೆ. ಆಗ ಅವರ ಮನಸ್ಸಿಗೆ ಬಂದು ಕೆಟ್ಟದನ್ನು ಮಾಡಬಾರದು ಎಂದು ನಿರ್ಧರಿಸುತ್ತಾರೆ. ಇದರಿಂದ ಮಾತ್ರ ಉತ್ತಮ ಸಮಾಜ ನಿರ್ಮಾಣ ಮಾಡಿ, ಕೋರ್ಟ್ ಕಚೇರಿಗಳಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಬಹುದು ಎಂದರು.
ಈ ಸಂದರ್ಭದಲ್ಲಿ ನ್ಯಾಯಾಧೀಶರಾದ ಶಿವಕುಮಾರ್, ಕಾಂತಮ್ಮ, ತಹಸೀಲ್ದಾರ್ ಶ್ರೀಶೈಲ ಯಮನಪ್ಪ ತಳವಾರ್, ತಾಪಂ ಇಓ ಶ್ರೀಕಂಠರಾಜೇ ಅರಸು, ವಕೀಲರ ಸಂಘದ ತಾಲೂಕು ಅಧ್ಯಕ್ಷ ಟಿ.ಎಸ್.ವೆಂಕಟೇಶ್, ಸಿಡಿಪಿಓ ಹೇಮಾವತಿ, ಟಿಎಚ್ ಓ ಗಿರೀದಾಸ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಸರಸ್ವತಿ, ಸಮಷ್ಟಿ ಸಮಗ್ರ ಅಭಿವೃದ್ಧಿ ಟ್ರಸ್ಟ್ನ ಗಂಗಾಧರಸ್ವಾಮಿ, ಮಹೇಶ್, ಕೈಲಾಶ್ ಸತ್ಯಾರ್ಥಿ ಚಿಲ್ಡ್ರನ್ ಪೌಂಡೇಶನ್ ಜಿಲ್ಲಾ ಸಂಯೋಜಕಾ ನಾರಾಯಣಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.