ವರದಿ: ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ : ಮಾಜಿ ಸಚಿವರಾದ ಸಾ.ರಾ. ಮಹೇಶ್ ಅವರು ಮೂರು ಬಾರಿ ಶಾಸಕರಾಗಿ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಒಂದೂವರೆ ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದು, ಸಿಎಂ ಸಿದ್ದರಾಮಯ್ಯನವರೂ ಸೇರಿದಂತೆ ಕೆಲ ಕಾಂಗ್ರೆಸ್ ಕಾರ್ಯಕರ್ತರು ಮಹೇಶ್ ಅವರ ವಿರುದ್ಧ ಮಾಡಿರುವ ಟೀಕೆ ಸರಿಯಲ್ಲ ಎಂದು ಯುವ ಜೆಡಿಎಸ್ ಅಧ್ಯಕ್ಷ ಕರ್ತಾಳ ಎಸ್. ಮಧು ಅವರು ಹೇಳಿದ್ದಾರೆ.
ಸಾ.ರಾ.ಮಹೇಶ್ ಅವರು ಹ್ಯಾಟ್ರಿಕ್ ಗೆಲುವು ಸಾಧಿಸಿ ಕೆ. ಆರ್. ನಗರ ವಿಧಾನಸಭಾ ಕ್ಷೇತ್ರವನ್ನು ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ದಿದ್ದರು. ಅಲ್ಲದೆ ತಮ್ಮ ಪರಿಶ್ರಮದಿಂದ ಸಂಪಾದಿಸಿದ ನೂರಾರು ಕೋಟಿ ಹಣವನ್ನು ಕ್ಷೇತ್ರದ ಅಭಿವೃದ್ಧಿಗೆ ಖರ್ಚು ಮಾಡಿದ್ದಾರೆ. ಮಹೇಶ್ ಅವರು ಶಕ್ತಿಮೀರಿ ಕ್ಷೇತ್ರವನ್ನು ಸರ್ವತೋಮುಖ ಅಭಿವೃದ್ಧಿ ಮಾಡಿದ್ದರು ವಿನಾಕಾರಣ ಟೀಕೆ ಮಾಡಿರುವುದು ಶೋಭೆ ತರದು ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೆ.ಆರ್. ನಗರ ಕ್ಷೇತ್ರದಲ್ಲಿ ಪ್ರಮುಖವಾಗಿ ಶಿಥಿಲಗೊಂಡಿದ್ದ ಎಲ್ಲಾ ನಾಲೆಗಳ ಆಧುನಿಕರಣ, ಗ್ರಾಮೀಣ ಪ್ರದೇಶಗಳಿಗೆ ಬಹುಗ್ರಾಮ ಶುದ್ಧ ಕುಡಿಯುವ ನೀರು ಯೋಜನೆ , ಹೆದ್ದಾರಿಗಳನ್ನು ಸಂಪರ್ಕಿಸುವ ಎಲ್ಲ ರಸ್ತೆಗಳ ಅಭಿವೃದ್ಧಿ, ಹಳ್ಳಿಗಳ ಪರಿಮಿತಿ ರಸ್ತೆಗಳ ಕಾಂಕ್ರೀಟೀಕರಣ, ಸಾಲಿಗ್ರಾಮ ತಾಲೂಕು ಕೇಂದ್ರ ಸ್ಥಾಪನೆ, ಜಪದಕಟ್ಟೆ ಏತ ನೀರಾವರಿ ಯೋಜನೆ ಅನುಷ್ಠಾನ, ಸ್ತ್ರೀ ಶಕ್ತಿ ಸಂಘಗಳಿಗೆ ಪ್ರತಿವರ್ಷ ಆರ್ಥಿಕ ನೆರವು, ವೈಯಕ್ತಿಕವಾಗಿ ಸಾವಿರಾರು ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ, ಆಂಬುಲೆನ್ಸ್ ಸೇವೆ, ಸಮುದಾಯ ಭವನಗಳ ಕಟ್ಟಡ ನಿರ್ಮಾಣ, ಪುರಾತನ ದೇವಾಲಯಗಳ ಜೀರ್ಣೋದ್ಧಾರ, ಹಲವು ಶಾಲಾ ಕಾಲೇಜುಗಳಿಗೆ ಸುಸಜ್ಜಿತ ಕಟ್ಟಡ, ಕೆ.ಆರ್. ನಗರ ಪಟ್ಟಣದಲ್ಲಿ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ, ರಸ್ತೆಗಳ ಅಭಿವೃದ್ಧಿ ಸೇರಿದಂತೆ ಸಾವಿರಾರು ಅಭಿವೃದ್ಧಿ ಕೆಲಸಗಳನ್ನು ಯಶಸ್ವಿಯಾಗಿಸಿ ಇತಿಹಾಸದಲ್ಲಿ ದಾಖಲಾಗುವಂತೆ ಮಾಡಿದ್ದಾರೆ. ವಿರೋಧ ಪಕ್ಷದವರು ಆರೋಗ್ಯಯುತ ಟೀಕೆಗಳನ್ನು ಮಾಡಬೇಕೆ ಹೊರತು ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ತರವಲ್ಲ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.