ಮಡಿಕೇರಿ : ಪೊನ್ನಂಪೇಟೆ ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಭೇಟಿ ನೀಡಿ ಪರಿಶೀಲಿಸಿದರು.
ಪೊನ್ನಂಪೇಟೆ ತಾಲ್ಲೂಕು ಆಡಳಿತ ಭವನ ನಿರ್ಮಾಣ ಸಂಬಂಧ ತಹಶೀಲ್ದಾರರ ಜೊತೆ ಚರ್ಚಿಸಿದರು. ಕಂದಾಯ ಇಲಾಖೆ ವ್ಯಾಪ್ತಿಯಲ್ಲಿನ ನ್ಯಾಯಾಲಯ ಪ್ರಕರಣಗಳನ್ನು ನಿಯಮಾನುಸಾರ ಆದಷ್ಟು ತ್ವರಿತವಾಗಿ ಇತ್ಯರ್ಥ ಪಡಿಸುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ದಕ್ಷಿಣ ಕೊಡಗಿನ ವಿವಿಧ ಹಾಡಿಗಳಲ್ಲಿ ಆದಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ವಾಸ ಮಾಡುತ್ತಿದ್ದು, ಅಗತ್ಯ ಮೂಲ ಸೌಲಭ್ಯ ಕಲ್ಪಿಸಬೇಕು. ಹಾಡಿ ಜನರ ಜೀವನ ಮಟ್ಟ ಸುಧಾರಣೆಗೆ ಕಂದಾಯ, ಐಟಿಡಿಪಿ, ಸಮಾಜ ಕಲ್ಯಾಣ, ಅರಣ್ಯ ಹೀಗೆ ಎಲ್ಲಾ ಇಲಾಖೆಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ನಿರ್ದೇಶನ ನೀಡಿದರು.
ತಾಲ್ಲೂಕು ಕಚೇರಿಗೆ ಸಾರ್ವಜನಿಕರು ಭೇಟಿ ನೀಡಿದ ಸಂದರ್ಭದಲ್ಲಿ ಆಗಬೇಕಿರುವ ಸರ್ಕಾರಿ ಕೆಲಸವನ್ನು ನಿಯಮಾನುಸಾರ ಕಾಲಮಿತಿಯಲ್ಲಿ ಒದಗಿಸಬೇಕು. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಗಳು ಉಂಟಾಗದಂತೆ ಸಕಾಲದಲ್ಲಿ ಅಗತ್ಯ ಪ್ರಮಾಣ ಪತ್ರವನ್ನು ನೀಡುವಂತೆ ತಹಶೀಲ್ದಾರರಿಗೆ ಸೂಚಿಸಿದರು.
ಕೃಷಿಕರು, ಕಾರ್ಮಿಕರು, ಆದಿವಾಸಿಗಳು ಹೀಗೆ ಯಾರನ್ನೂ ಸತಾಯಿಸದೆ ಕಾಲಮಿತಿಯಲ್ಲಿ ಸರ್ಕಾರದ ಯೋಜನೆಗಳನ್ನು ತಲುಪಿಸಲು ಮುಂದಾಗುವಂತೆ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಪೊನ್ನಂಪೇಟೆ ಹಾಕಿ ಮೈದಾನ ಪರಿಶೀಲಿಸಿದ ಜಿಲ್ಲಾಧಿಕಾರಿ ಅವರು ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾಹಿತಿ ಪಡೆದು ಕೊಡಗು ಜಿಲ್ಲೆಯ ವಿದ್ಯಾರ್ಥಿಗಳಿಗೆ ಹಾಕಿ ಕ್ರೀಡಾ ವಿದ್ಯಾಲಯದ ಪ್ರಯೋಜನ ದೊರೆಯುವಂತಾಗಬೇಕು ಎಂದು ಹೇಳಿದರು. ನಂತರ ಪ್ರವಾಸಿ ಮಂದಿರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ತಹಶೀಲ್ದಾರ್ ಪ್ರಶಾಂತ್ ಇತರರು ಇದ್ದರು.