Thursday, May 15, 2025
Google search engine

Homeರಾಜ್ಯಜನಮೆಚ್ಚಿನ ಅಭಿವೃದ್ಧಿಗೆ ವಿಕೇಂದ್ರೀಕರಣ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನಮೆಚ್ಚಿನ ಅಭಿವೃದ್ಧಿಗೆ ವಿಕೇಂದ್ರೀಕರಣ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗ ಹಾಗೂ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಜಂಟಿ ಸಭೆ ನಡೆಯಿತು.

ವಿಕೇಂದ್ರೀಕರಣದಲ್ಲಿ ಜನರ ಒಳಗೊಳ್ಳುವಿಕೆ ಮುಖ್ಯ. ಜನರ ಅಭಿಪ್ರಾಯಗಳಿಗೆ ಮನ್ನಣೆ ನೀಡಬೇಕು. ಯೋಜನಾ ಮತ್ತು ಅಭಿವೃದ್ಧಿ ಸಮಿತಿಗಳು ಬಜೆಟ್ ಮಂಡನೆಗೆ ಪೂರ್ವದಲ್ಲಿ ಸಭೆ ಕರೆದು ಅಭಿಪ್ರಾಯಗಳನ್ನು ಚರ್ಚಿಸಬೇಕು ಎಂದು ಸೂಚಿಸಿದರು. ರಾಜ್ಯದ ನೀತಿ ಆಯೋಗದ ಉಪಾಧ್ಯಕ್ಷರು ನಿಯಮಿತವಾಗಿ ರಾಜ್ಯ ಪ್ರವಾಸ ಮಾಡಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದರು.

ನೀತಿ ಯೋಜನೆ ಸಮಿತಿಗಳ ಆಯ್ಕೆ ಕಾಲಕಾಲಕ್ಕೆ ಆಗುವ ಕುರಿತಂತೆ ಹಾಗೂ ಸಭೆಗಳು ನಿಯಮಿತವಾಗಿ ನಡೆಯಲು ಅಧಿಕಾರಿಗಳು ಕ್ರಮ ವಹಿಸಬೇಕು. ಮೂರು ತಿಂಗಳಿಗೊಮ್ಮೆ ಕಡ್ಡಾಯವಾಗಿ ಸಭೆ ನಡೆಯಬೇಕು. ಇದಕ್ಕೆ ಕ್ರಮ ಕೈಗೊಳ್ಳಲಾಗುವಂತೆ ಜಿಲ್ಲಾಧಿಕಾರಿಗಳು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗುವುದು. ತಾಲ್ಲೂಕು, ಜಿಲ್ಲಾ ಮಟ್ಟದ ಸಮಿತಿಯ ಶಿಫಾರಸುಗಳನ್ನು ಗಮನಕ್ಕೆ ತಂದು ಬಜೆಟ್ ಪೂರ್ವ ಸಭೆಗಳಲ್ಲಿ ಮಂಡಿಸಬೇಕು. ವಿಕೇಂದ್ರೀಕರಣದ ಪರ ಅಧಿಕಾರವನ್ನು ಗ್ರಾಮ ಮಟ್ಟಕ್ಕೆ ತೆಗೆದುಕೊಂಡು ಹೋಗಬೇಕು ಎಂದರು.

ಸಂವಿಧಾನದ (73)(74) ರನ್ವಯ ಗ್ರಾಮ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿಲ್ಲ ಇದನ್ನು ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಮ ಹಾಗೂ ಸ್ಥಳೀಯ ಸಂಸ್ಥೆ ಗಳಲ್ಲಿ ಮಹಿಳಾ ಮೀಸಲಾತಿ, ಹಿಂದುಳಿದವರಿಗೆ ಮೀಸಲಾತಿ ಸರಿಯಾಗಿ ಪಾಲನೆ ಆಗುತ್ತಿದೆಯೇ ಗಮನ ವಹಿಸಲು ಉಪಾಧ್ಯಕ್ಷರಿಗೆ ಸೂಚಿಸಿದರು ಸ್ಥಳೀಯ ಸಂಸ್ಥೆಗಳ ಆರ್ಥಿಕ ಸಹಾಯ ಒದಗಿಸಲು ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ ಅವರು ವರದಿಯನ್ನು ನೀಡಿದ್ದು ಅದರ ಜಾರಿಗೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

ಸಂವಿಧಾನದ 73ನೇ ತಿದ್ದುಪಡಿ ಅನ್ವಯ ಪಂಚಾಯತ್ ರಾಜ್ ಸಂಸ್ಥೆಗಳಿಗೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಲು 2023-24ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಲಾಗಿತ್ತು. ಅದರಂತೆ ಗ್ರಾಮೀಣಾಭಿವೃದ್ಧಿ ಇಲಾಖೆಯು 13 ಇಲಾಖೆಗಳಿಗೆ ಸಂಬಂಧಿಸಿದಂತೆ ಜವಾಬ್ದಾರಿ ನಕ್ಷೆಯನ್ನು ಸಿದ್ದಪಡಿಸಿದ್ದು ಅದರಲ್ಲಿ ಆರೋಗ್ಯ ಇಲಾಖೆ, ಪರಿಶಿಷ್ಟ ಪಂಗಡ, ಪರಿಶಿಷ್ಟ ಜಾತಿ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ, ಕೃಷಿ, ಜಲಾನಯನ ಅಭಿವೃದ್ಧಿ, ತೋಟಗಾರಿಕೆ ಮತ್ತು ರೇಷ್ಮೆ ಸೇರಿದಂತೆ 9 ಇಲಾಖೆಗಳ ಕಾರ್ಯಚಟುವಟಿಕೆಯ ಜವಾಬ್ದಾರಿ ನಕ್ಷೆಗಳು ಅಧಿಸೂಚನೆಗೊಂಡಿವೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಶಿಕ್ಷಣ, ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಗಳಿಂದ ಸಹಮತಿ ಬಾಕಿ ಇರುತ್ತದೆ. 2ನೇ ಹಂತದಲ್ಲಿ ಬಾಕಿ ಇರುವ ಉಳಿದ 16 ಇಲಾಖೆಗಳ ಕಾರ್ಯಚಟುವಟಿಕೆಗಳ ಜವಾಬ್ದಾರಿ ನಕ್ಷೆಯನ್ನು 2025ರ ಆಗಸ್ಟ್ 15ರ ಒಳಗೆ ಪೂರ್ಣಗೊಳಿಸಲು ತಿಳಿಸಿದರು.

ಗ್ರಾಮ ಠಾಣಾ ಗಡಿಯನ್ನು ಬಹಳ ಹಿಂದೆ ನಿಗದಿ ಪಡಿಸಲಾಗಿದ್ದು ಪ್ರಸ್ತುತ ವಿಸ್ತರಣೆ ಆಗಿರುವ ಪ್ರದೇಶವನ್ನು ಪುನರ್ ಸಮೀಕ್ಷೆ ಮಾಡಿಸಿ ನಿಗದಿ ಪಡಿಸಲು ಕಂದಾಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಕ್ರಮ ವಹಿಸುವ ಕುರಿತಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು. ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಮೂಲಭೂತ ಸೌಕರ್ಯ ಅಭಿವೃದ್ಧಿಗೊಳಿಸಲು ಲ್ಯಾಂಡ್ ಬ್ಯಾಂಕ್ ಸ್ಥಾಪನೆ , ಗ್ರಾಮ ನಕ್ಷೆ ಹೊಂದಿರದ ಗ್ರಾಮಗಳಿಗೆ ಗ್ರಾಮ ನಕ್ಷೆ ರಚನೆ ಕುರಿತಂತೆಯೂ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಸಚಿವರಾದ ಪ್ರಿಯಾಂಕ ಖರ್ಗೆ, 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ ನಾರಾಯಣಸ್ವಾಮಿ, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ ಆರ್ ಪಾಟೀಲ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ ಶಾಲಿನಿ ರಜನೀಶ್ ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES
- Advertisment -
Google search engine

Most Popular