ಮೈಸೂರು: ಪ್ರಸ್ತುತ ಸಂದರ್ಭದಲ್ಲಿ ವಿಜ್ಞಾನ, ತಂತ್ರಜ್ಞಾನ ಕ್ಷೇತ್ರ ಸಾಕಷ್ಟು ಪ್ರಗತಿ ಹೊಂದಿದ್ದರೂ, ನಮ್ಮಲ್ಲಿ ಮಾನವೀಯತೆ ಮೌಲ್ಯಗಳು ಕುಸಿಯುತ್ತಿವೆ ಎಂದು ಸೆಸ್ಕ್ ತಾಂತ್ರಿಕ ವಿಭಾಗದ ನಿರ್ದೇಶಕ ಮುನಿಗೋಪಾಲ್ ರಾಜು ಕಳವಳ ವ್ಯಕ್ತಪಡಿಸಿದ್ದಾರೆ.
ವಿಜಯನಗರದ 2ನೇ ಹಂತದಲ್ಲಿರುವ ನಿಗಮದ ಕಚೇರಿಯಲ್ಲಿ ಬುಧವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, ಮಾನವೀಯ ಮೌಲ್ಯಗಳು ಕುಸಿಯುತ್ತಿರುವುದು ಕಳವಳಕಾರಿ. ಕೆಲವೊಮ್ಮೆ ನಮ್ಮ ಸುತ್ತಲಿನ ಬೆಳವಣಿಗೆ ಗಮನಿಸಿದರೆ, ಮುಂದೇನು? ಎಂಬ ಆತಂಕ ಮೂಡುತ್ತದೆ ಎಂದರು.
ಈ ನಿಟ್ಟಿನಲ್ಲಿ ಗಾಂಧಿಜೀ ಅವರ ಆದರ್ಶಗಳನ್ನು ಮೈಗೂಡಿಸಿಕೊಂಡು ಕೆಲಸ ಮಾಡಿದ್ದೇ ಆದಲ್ಲಿ ನಮ್ಮ ಹಾಗೂ ರಾಷ್ಟ್ರದ ಪ್ರಗತಿ ಸಾಧ್ಯವಾಗಲಿದೆ. ಅಂತೆಯೇ ಜೈ ಜವಾನ್ ಜೈ ಕಿಸಾನ್ ಎಂಬ ನಾಣ್ನುಡಿಯೊಂದಿಗೆ ಕರ್ತವ್ಯ ಪ್ರಜ್ಞೆ, ಸೇವೆಯಿಂದ ಕೆಲಸ ಮಾಡಿದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ಸಹ ನಮಗೆ ಆದರ್ಶವಾಗಿದ್ದು, ಅವರ ಆದರ್ಶಗಳನ್ನು ಸಹ ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ನಮ್ಮ ಮಕ್ಕಳಿಗೂ ಈ ಬಗ್ಗೆ ತಿಳುವಳಿಕೆ ಮೂಡಿಸಬೇಕು ಎಂದು ಹೇಳಿದರು.
ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯುವ ದೀಪಾಲಂಕಾರಕ್ಕೆ ಎಲ್ಲ ರೀತಿಯ ತಯಾರಿ ಮಾಡಿಕೊಳ್ಳಲಾಗಿದೆ. ಈ ಬಾರಿಯ ದಸರಾ ದೀಪಾಲಂಕಾರ ಅತ್ಯಂತ ಉತ್ತಮವಾಗಿ ಮಾಡಲಾಗಿದ್ದು, ಕೆಲವು ರಸ್ತೆಗಳಲ್ಲಿ ಮಾಡಿರುವ ದೀಪಾಲಂಕಾರ ಎಲ್ಲರನ್ನೂ ನಿಬ್ಬೆರಗಾಗುವಂತೆ ಮಾಡುತ್ತಿದ್ದು, ಕೆಲವು ವೃತ್ತಗಳ ದೀಪಾಲಂಕಾರ ಕಲಾತ್ಮಕತೆಯನ್ನು ಎತ್ತಿಹಿಡಿಯುವಂತಿದೆ ಎಂದರು.
ಈ ಸಂದರ್ಭದಲ್ಲಿ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.