ಹನೂರು: ಅಕ್ರಮವಾಗಿ ಶೇಖರಣೆ ಮಾಡಿದ್ದ ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಅರಣ್ಯ ಸಂಚಾರ ದಳದ ಪೊಲೀಸರು ಬಂಧಿಸಿದ್ದಾರೆ.
ಹನೂರು ತಾಲೂಕಿನ ಹುಣಸೆಪಾಳ್ಯ ಗ್ರಾಮದ ನಿವಾಸಿಗಳಾದ ಈರಣ್ಣ (೪೯) ಆರ್ಯ (೨೨) ಬಂಧಿತ ಆರೋಪಿಗಳಾಗಿದ್ದಾರೆ.
ಘಟನೆಯ ವಿವರ: ಹುಣಸೆಪಾಳ್ಯ ಗ್ರಾಮದ ಇಬ್ಬರು ವ್ಯಕ್ತಿಗಳು ಒಡೆಯರಪಾಳ್ಯ ಕಡೆಯಿಂದ ಕೊಳ್ಳೇಗಾಲ ಮಾರ್ಗವಾಗಿ ಹೋಂಡಾ ಶೈನ್ ಮೋಟಾರ್ ಬೈಕ್ ನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಜಿಂಕೆ ಕೊಂಬುಗಳನ್ನು ಸಾಗಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಅರಣ್ಯ ಸಂಚಾರದಳದ ಸಬ್ ಇನ್ಸ್ಪೆಕ್ಟರ್ ವಿಜಯ್ ರಾಜ್ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ದ್ವಿಚಕ್ರ ವಾಹನದಲ್ಲಿ ಸಾಗಾಟ ಮಾಡುತ್ತಿದ್ದ 12 ಒಣಗಿದ ಜಿಂಕೆ ಕೊಂಬು, ಕೃತಕ್ಕೆ ಬಳಸುತ್ತಿದ್ದ ದ್ವಿಚಕ್ರ ವಾಹನ ಕೆಎ-೧೦ ಯು ೪೦೩೪ ವಶಕ್ಕೆ ಪಡೆದು ವನ್ಯಜೀವಿ ಸಂರಕ್ಷಣಾ ತಿದ್ದುಪಡಿ ಕಾಯ್ದೆಯಡಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಕೊಳ್ಳೆಗಾಲ ಜೆಎಂಎಫ್ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ದಾಳಿಯಲ್ಲಿ ಮುಖ್ಯಪೇದೆಗಳಾದ ಸ್ವಾಮಿ, ರಾಮಚಂದ್ರ, ಶಂಕರ್, ಬಸವರಾಜು ಪೇದೆ ಬಸವರಾಜು ಪಾಲ್ಗೊಂಡಿದ್ದರು.