ಮಡಿಕೇರಿ : ತೀವ್ರತರವಾದ ಮತ್ತು ಪರಿಣಾಮಕಾರಿ ಮಿಷನ್ ಇಂದ್ರಧನುಷ್ 5.0 ಅಭಿಯಾನದಲ್ಲಿ 5 ವರ್ಷದೊಳಗಿನ ಮಕ್ಕಳಿಗೆ ಮತ್ತು ಗರ್ಭಿಣೀಯರಿಗೆ ಲಸಿಕಾ ಡೋಸ್ಗಳನ್ನು ತಲುಪಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ ಅವರು ಸೂಚಿಸಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ತೀವ್ರತರವಾದ ಮಿಷನ್ ಇಂದ್ರಧನುಷ್ 5.0-ದಡಾರ-ರುಬೆಲ್ಲಾ ನಿರ್ಮೂಲನೆ ಸಂಬಂಧಿಸಿದಂತೆ 2 ಸುತ್ತಿನ ಕಾರ್ಯಕ್ರಮ ಬಗ್ಗೆ ಮಾಹಿತಿ ಪಡೆದು ಅವರು ಮಾತನಾಡಿದರು. ವಿವಿಧ ಕಾರಣಗಳಿಂದ ಬಿಟ್ಟು ಹೋಗಿರುವ 5 ವರ್ಷದೊಳಗಿನ ಮಕ್ಕಳು ಮತ್ತು ಗರ್ಭಿಣೀಯರಿಗೆ ಮಿಷನ್ ಇಂದ್ರಧನುಷ್ 5.0 ದಡಾರ-ರುಬೆಲ್ಲಾ ನಿರ್ಮೂಲನೆ ಮಾಡಲು ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದ್ದು, ಆ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಪ್ರಗತಿ ಸಾಧಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ನಿರ್ದೇಶನ ನೀಡಿದರು.
ಮಿಷನ್ ಇಂದ್ರಧನುಷ್ ಕಾರ್ಯಕ್ರಮ ಸಂಬಂಧಿಸಿದಂತೆ ವಿಶೇಷವಾಗಿ ದಡಾರ ಮತ್ತು ರುಬೆಲ್ಲಾ ರೋಗ ನಿರೋಧಕತೆಯ ಅಂತರ ಕಡಿಮೆ ಮಾಡುವುದು, ಇದುವರೆಗೆ ಲಸಿಕೆ ಡೋಸ್ ಪಡೆಯದಿದ್ದಲ್ಲಿ ಲಸಿಕೆಯನ್ನು ತಲುಪಿಸುವುದು, ಲಸಿಕೆ ಪಡೆದಿರುವ ಬಗ್ಗೆ ಖಾತರಿ ಪಡಿಸಿಕೊಳ್ಳುವುದು. ಹಾಗೆಯೇ ಹೊಸ ಲಸಿಕೆಗಳ ಲಸಿಕಾ ಪ್ರಗತಿಯನ್ನು ಹೆಚ್ಚಿಸುವುದು ಪ್ರಮುಖ ಉದ್ದೇಶವಾಗಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ನಿರ್ದೇಶನದಂತೆ ಕಾರ್ಯಕ್ರಮ ಅನುಷ್ಠಾನಕ್ಕೆ ಮುಂದಾಗುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು.
ವಲಸಿಗ 5 ವರ್ಷದೊಳಗಿನ ಮಕ್ಕಳು, ಗರ್ಭಿಣೀಯರನ್ನು ಪತ್ತೆ ಹಚ್ಚಿ ಅರ್ಹರಿಗೆ ಲಸಿಕೆ ನೀಡುವಂತಾಗಬೇಕು. ತಾಲ್ಲೂಕುವಾರು ಮಾಹಿತಿಯನ್ನು ನಿಖರವಾಗಿ ಒದಗಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಸೂಚಿಸಿದರು. ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಅವರು ಮಾಹಿತಿ ನೀಡಿ ಮಿಷನ್ ಇಂದ್ರಧನುಷ್ ಅನುಷ್ಠಾನ ಸಂಬಂಧಿಸಿದಂತೆ ಮೊದಲ ಸುತ್ತಿನಲ್ಲಿ ಶೇಕಡವಾರು ಪ್ರಗತಿ ಸಾಧಿಸಲಾಗಿದೆ. ಸೆಪ್ಟೆಂಬರ್, 11 ರಿಂದ 16 ರವರೆಗೆ ಎರಡನೇ ಸುತ್ತಿನಲ್ಲಿ ಮಿಷನ್ ಇಂದ್ರಧನುಷ್ ಲಸಿಕಾಕರಣ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಗರ್ಭಿಣೀಯರು ಮತ್ತು 5 ವರ್ಷದೊಳಗಿನ ಮಕ್ಕಳ ಮಾಹಿತಿಯನ್ನು ಪ್ರಾಥಮಿಕ ಆರೋಗ್ಯ ಅಧಿಕಾರಿ ಮತ್ತು ಆಶಾ ಕಾರ್ಯಕರ್ತರಿಗೆ ನೀಡುವಂತಾಗಬೇಕು. ಮನೆ ಮನೆಗೆ ಭೇಟಿ ಮಾಡಿ ಲಸಿಕೆ ಪಡೆಯಬೇಕಿರುವ, ಇದುವರೆಗೆ ಪಡೆಯದಿರುವ ಬಗ್ಗೆ ಖಾತರಿಪಡಿಸಿಕೊಳ್ಳುವಂತೆ ಕೋರಿದರು.
ವಿಶೇಷವಾಗಿ 2 ರಿಂದ 5 ವರ್ಷದೊಳಗಿನ ಮಕ್ಕಳು ದಡಾರ, ರುಬೆಲ್ಲಾ-2, ಡಿಬಿಟಿ ಬೂಸ್ಟರ್, ಒಪಿವಿ ಬೂಸ್ಟರ್ ಪಡೆದಿದ್ದಾರೆ ಎಂಬುದನ್ನು ಪರಿಶೀಲಿಸಬೇಕಿದೆ ಎಂದು ತಿಳಿಸಿದರು. ಗರ್ಭಿಣಿ ಮಹಿಳೆಯರ ಟಿಡಿ ಲಸಿಕಾಕರಣ ಮತ್ತು ಮಕ್ಕಳ ಲಸಿಕಾಕರಣದ ಕುರಿತು ಮಾಹಿತಿ ನೀಡುವುದು. ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರು, ತೋಟದ ಮನೆಗಳು, ವಲಸಿಗರು, ಹೀಗೆ ಹಲವು ಅರ್ಹರು ಲಸಿಕಾಕರಣದಿಂದ ಬಿಟ್ಟು ಹೋಗಿದ್ದರೆ ಮಾಹಿತಿ ನೀಡುವುದು. ಅಭಿಯಾನದ ಸಮಯದಲ್ಲಿ ಅಂಗನವಾಡಿ ಕೇಂದ್ರ ತೆರೆಯಬೇಕು ಎಂದು ಡಾ.ಆನಂದ್ ಅವರು ಹೇಳಿದರು.
ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಸುದೀರ್ ನಾಯಕ್, ಐಟಿಡಿಪಿ ಅಧಿಕಾರಿ ಹೊನ್ನೇಗೌಡ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನಟರಾಜು, ಡಾ.ಚೇತನ್, ಡಾ.ಶ್ರೀನಿವಾಸ್, ಡಾ.ಪುರುಷೋತ್ತಮ, ನಗರಸಭೆ ಎಂಜಿನಿಯರ್ ಸೌಮ್ಯ, ಆರೋಗ್ಯ ಶಿಕ್ಷಣಾಧಿಕಾರಿ ಪಾಲಾಕ್ಷ ಇತರರು ಇದ್ದರು.