ಗದಗ : ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆಯಿಂದಾಗಿ ಮೃತ ಮಹಿಳೆಯೊಬ್ಬರ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ನಡೆಸಲು ಗ್ರಾಮಸ್ಥರು ಮುಂದಾದ ಘಟನೆ ಬೆಳಕಿಗೆ ಬಂದಿದೆ.
ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಅವರ ಅಂತ್ಯಕ್ರಿಯೆಗೆ ಸೂಕ್ತ ಸ್ಥಳ ದೊರೆಯದೆ ಗ್ರಾಮದಲ್ಲಿ ಪರಿಸ್ಥಿತಿ ಉದ್ವಿಗ್ನವಾಗಿದ್ದು ಈ ಹಿಂದೆ ಗ್ರಾಮದ ರೈತರೊಬ್ಬರ ಖಾಸಗಿ ಜಮೀನಿನಲ್ಲಿ ಶವಸಂಸ್ಕಾರ ನಡೆಸಲಾಗುತ್ತಿತ್ತು. ಆದರೆ, ಇದೀಗ ಜಮೀನಿನ ಮಾಲೀಕರು ತಮ್ಮ ಜಾಗದಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲು ನಿರಾಕರಿಸಿದ್ದಾರೆ.
ಇದರಿಂದ ಬೇರೆ ಮಾರ್ಗವಿಲ್ಲದೆ ಗ್ರಾಮಸ್ಥರು ಗ್ರಾಮದ ಮುಖ್ಯ ರಸ್ತೆಯಲ್ಲೇ ಕಟ್ಟಿಗೆಗಳನ್ನು ಜೋಡಿಸಿ ಅಂತ್ಯಕ್ರಿಯೆ ನಡೆಸಲು ಸಿದ್ಧತೆ ಮಾಡಿಕೊಂಡಿದ್ದಾರೆ. ಸ್ಮಶಾನ ಜಾಗಕ್ಕಾಗಿ ಹಲವು ಬಾರಿ ಸ್ಥಳೀಯ ಶಾಸಕ ಎಚ್.ಕೆ.ಪಾಟೀಲ್ ಹಾಗೂ ತಹಶೀಲ್ದಾರರಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಮೃತರ ಅಂತ್ಯಸಂಸ್ಕಾರಕ್ಕೂ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿರುವುದಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಜಿಲ್ಲಾಡಳಿತ ಕೂಡಲೇ ಮಧ್ಯಪ್ರವೇಶಿಸಿ ಗ್ರಾಮಕ್ಕೆ ಶಾಶ್ವತ ಸ್ಮಶಾನ ಜಾಗ ಮಂಜೂರು ಮಾಡಬೇಕು ಎಂದು ಆಗ್ರಹಿಸಿದ್ದಾರೆ.



