ಬೆಂಗಳೂರು: ನಗರದಲ್ಲಿ ಭಾರೀ ಮಳೆಯ ಕಾರಣದಿಂದಾಗಿ ಡೆಂಗ್ಯೂ ಪ್ರಕರಣಗಳಲ್ಲಿ ಭಾರೀ ಹೆಚ್ಚಳವಾಗಿದೆ. ಆರೋಗ್ಯಯ ಮಾಹಿತಿಯಂತೆ ಶೇ.40 ರಿಂದ 50ರಷ್ಟು ಮಳೆಯ ನಂತ್ರ ಹೆಚ್ಚಳವಾಗಿದೆ. ಹೀಗಾಗಿ ಡೆಂಗ್ಯೂ ನಿಯಂತ್ರಣಕ್ಕೆ ಬೆಂಗಳೂರಿನಲ್ಲಿ 240 ಆರೋಗ್ಯ ನಿರೀಕ್ಷಣಾಧಿಕಾರಿಗಳು, 700 ಸ್ವಯಂ ಸೇವಕರನ್ನು ನೇಮಿಸಲಾಗಿದೆ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ರಾಜ್ಯ ಮಟ್ಟದ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಸಚಿವರು, ಬೆಂಗಳೂರಿನಲ್ಲಿಯೇ ಶೇ 40 ರಿಂದ 50 ರಷ್ಟು ಡೆಂಗ್ಯೂ ಪ್ರಕರಣಗಳು ಕಂಡುಬರುತ್ತಿದ್ದು, ನಾಗರಿಕರು ಕೂಡ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು ಅಗತ್ಯವಾಗಿದೆ ಎಂದರು.
ಪರಿಶೀಲಿಸಿ, ಸ್ವಚ್ಛಗೊಳಿಸಿ, ಮುಚ್ಚಿಡಿ ಎಂಬ ಘೋಷವಾಕ್ಯದೊಂದಿಗೆ ಡೆಂಗ್ಯೂ ಸೋಲಿಸುವ ಅಭಿಯಾನವನ್ನು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಸಹಯೋಗದಲ್ಲಿ ಪ್ರಾರಂಭಿಸಲಾಗಿದ್ದು, ಸಾರ್ವಜನಿಕ ಸ್ಥಳಗಳು, ನೀರು ನಿಲ್ಲುವ ಪ್ರದೇಶಗಳಲ್ಲಿ ಡೆಂಗ್ಯೂ ತರುವ ಸೊಳ್ಳಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗುತ್ತಿದೆ. ವಿಶೇಷವಾಗಿ ಸಾರ್ವಜನಿಕರು ಸ್ವಯಂ ಸ್ವಚ್ಚತೆಗೆ ಆದ್ಯತೆ ನೀಡಿ, ಸುರಕ್ಷತಾ ಕ್ರಮಗಳನ್ನು ಕೈಗೊಂಡಾಗ ಮಾತ್ರ ಡೆಂಗ್ಯೂ ನಿಯಂತ್ರಣ ಮಾಡಲು ಸಾಧ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಂಗಳೂರನ್ನ ಡೆಂಗ್ಯೂ ಮುಕ್ತ ನಗರವನ್ನಾಗಿ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸ್ವಯಂ ಸೇವಕರು, ಆಶಾ ಕಾರ್ಯಕರ್ತೆಯರು ಆರೋಗ್ಯ ಸಿಬ್ಬಂದಿಗಳು, ಎಲ್ಲರೂ ಸೇರಿ ಉತ್ತಮ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಕರೆ ನೀಡಿದರು.
ಇದಕ್ಕು ಮುನ್ನ, ಚಿಕ್ಕಪೇಟೆ ವ್ಯಾಪ್ತಿಯ ಕುಂಬಾರಗುಂಡಿ ಬಡಾವಣೆಯಲ್ಲಿ ಮನೆ ಮನೆಗೆ ತೆರಳಿ ಡೆಂಗ್ಯೂ ವಿರುದ್ಧ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದ ಸಚಿವರು, ಡೆಂಗ್ಯೂ ಲಾವಾ ಉತ್ಪತ್ತಿ ತಾಣವಾದ ಶುದ್ಧ ನೀರಿನ ಘಟಕಗಳಾದ ನೀರಿನ ಟ್ಯಾಂಕ್, ಮನೆಯಲ್ಲಿನ ಬಿಂದಿಗೆ, ಹಳೆಯ ಟೈರ್ ಗಳು, ತೆಂಗಿನ ಚಿಪ್ಪುಗಳಲ್ಲಿ ಈಡಿಸ್ ಸೊಳ್ಳೆ ಲಾವಾಗಳನ್ನು ಉತ್ಪಿಸುತ್ತದೆ. ಸಾಧ್ಯವಾದಷ್ಟು ಈ ಎಲ್ಲಾ ತಾಣಗಳನ್ನು ಸುಚ್ಚಿತ್ವ ಕಾಪಾಡಿಕೊಂಡರೆ ನಾವು ಡೆಂಗ್ಯೂ ಸಂಪೂರ್ಣ ಹತೋಟಿಗೆ ತರಲು ಸಾಧ್ಯವಾಗುತ್ತದೆ ಎಂದು ಕಿವಿ ಮಾತು ಹೇಳಿದರು.