ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 200ಕ್ಕು ಹೆಚ್ಚು ಅಕ್ರಮ ವಲಸಿಗರನ್ನು ಗುರುತಿಸಿ, ಅವರನ್ನು ಗಡಿಪಾರು ಮಾಡಲಾಗಿದೆ ಎಂದು ತಿಳಿಸಿದರು.
ಎಫ್ಆರ್ಆರ್ಒ ಅಧಿಕಾರಿಗಳ ಸಹಾಯದಿಂದ ವಲಸಿಗರನ್ನು ಗುರುತಿಸಲಾಗುತ್ತಿದ್ದು, ಇದೇ ರೀತಿಯಲ್ಲಿ ಮುಂದುವರೆಯಲಿದೆ. “ಇದು ಒಂದು ದಿನದ ಕಾರ್ಯವಲ್ಲ. ಇದು ನಿರಂತರ ಪ್ರಕ್ರಿಯೆ,” ಎಂದು ಅವರು ಹೇಳಿದರು.
ಅಕ್ರಮ ವಲಸಿಗರಲ್ಲಿ ಕೆಲವರು ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬಂದಿದ್ದು, ಅವರನ್ನೂ ಪರಿಶೀಲನೆಗೆ ಒಳಪಡಿಸಲಾಗುವುದು. ತಪ್ಪು ಕಂಡುಬಂದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.
ಬಾಂಗ್ಲಾ ನುಸುಳುಕೋರರ ಬಗ್ಗೆ ಕಾಂಗ್ರೆಸ್ಗೆ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಎಐಸಿಸಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ ಅವರ ಭೇಟಿಯ ವಿಷಯದಲ್ಲೂ ಮಾತನಾಡಿದರು.
ರಂಭಾಪುರಿ ಶ್ರೀಗಳ ಹೇಳಿಕೆಯ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಅವರು ತಮ್ಮ ಅಭಿಪ್ರಾಯವನ್ನು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.
ಸೋಲುದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿನ ಕೊಲೆಯತ್ನ ಪ್ರಕರಣದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆರೋಪಿತರು ಅರೆಸ್ಟ್ ಆಗಿದ್ದಾರೆ. ಪ್ರಕರಣದ ಸಂಪೂರ್ಣ ಮಾಹಿತಿ ಕೊಟ್ಟಿಲ್ಲ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆಯಿಂದ ಪ್ರೆರೇಪಿತರಾಗುತ್ತಿದ್ದಾರೆ ಎಂಬುದು ಗೊತ್ತಿಲ್ಲ. ಆ ರೀತಿಯಾಗಿ ಸಮಾಜದಲ್ಲಿ ಯುವಕರ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆಯೇ ಎಂಬುದರ ಕುರಿತು ಮನಶಾಸ್ತ್ರಜ್ಞರು ಅಧ್ಯಯನ ನಡೆಸಬೇಕು ಎಂದರು.