ಮೈಸೂರು : ರಾಜ್ಯ ಸರ್ಕಾರವನ್ನು ‘ಟೆಂಡರ್ ಸರ್ಕಾರ’ ಎಂದು ಟೀಕಿಸಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನವನ್ನು ಕೂಡ ಟೆಂಡರ್ ಮೂಲಕ ಪಡೆದಿದ್ದಾರೆ ಎಂದು ಆರೋಪಿಸಿದರು.
ಮೈಸೂರಿನ ಜೆ.ಕೆ.ಮೈದಾನದಲ್ಲಿ ಕಾಯಕ ಸಮುದಾಯಗಳ ಒಕ್ಕೂಟ (ಮೈಸೂರು ವಿಭಾಗ) ಆಯೋಜಿಸಿದ್ದ ವಿಧಾನಪರಿಷತ್ ಸದಸ್ಯ ಆರ್.ರಘು ಕೌಟಿಲ್ಯ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಡಿಕೆಶಿ ಎಂದರೆ ಟೆಂಡರ್. ಸಿಎಂ ಕುರ್ಚಿಯನ್ನೂ ಟೆಂಡರ್ನಲ್ಲೇ ಖರೀದಿಸಿದ್ದಾರೆ. ಈಗ ಎಲ್ಲದಕ್ಕೂ ಟೆಂಡರ್ ಕರೆಯಲಾಗುತ್ತಿದೆ ಎಂದು ಆರ್.ಅಶೋಕ್ ಆರೋಪಿಸಿದರು.
ಇನ್ನೂ ಕಾಂಗ್ರೆಸ್ ನೇತೃತ್ವದ ಸರ್ಕಾರದಲ್ಲಿ ಈವರೆಗೆ ಸುಮಾರು 60 ಸಾವಿರ ಎಕರೆ ಭೂಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಲಾಗಿದೆ ಎಂಬ ಮಾಹಿತಿಯಿದ್ದು, ಮುಂದಿನ ಮುಖ್ಯಮಂತ್ರಿಗಳಿಗೆ ಯಾವುದೇ ಟೆಂಡರ್ ಕರೆಯುವ ಅವಕಾಶವೇ ಉಳಿಯದಷ್ಟು ಪ್ರಕ್ರಿಯೆಗಳನ್ನು ಈಗಾಗಲೇ ನಡೆಸಲಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ‘ಮುಖವಾಡದ ಮುಖ್ಯಮಂತ್ರಿ’ ಎಂದು ಟೀಕಿಸಿದ ಅಶೋಕ್, ಸರ್ಕಾರದ ಕೆಲವು ನೀತಿಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.
ಇದೇ ವೇಳೆ ರಾಜ್ಯದಲ್ಲಿ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್ಸಿ) ನೀಡುವ ವಿಚಾರವಾಗಿ ಮಾತನಾಡಿದ ಅವರು, ಇದನ್ನು ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಕೈಗೊಳ್ಳಲಾಗುತ್ತಿದೆ ಎಂದು ಆರೋಪಿಸಿದ ಅವರು, ಬಾಂಗ್ಲಾದೇಶದವರ ಪರವಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ ಎಂಬ ಆರೋಪ ಮಾಡಿದ್ದಾರೆ. ಅಲ್ಲದೆ ಈ ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರಕ್ಕೆ ಈ ವಿಚಾರದಲ್ಲಿ ಅಧಿಕಾರವಿಲ್ಲದಿದ್ದರೂ ಪಿಆರ್ಸಿ ನೀಡುವ ಕೆಲಸ ಮಾಡಲಾಗುತ್ತಿದೆ. ಇದು ಕೇಂದ್ರದ ಕಾನೂನುಗಳನ್ನು ದುರ್ಬಲಗೊಳಿಸುವ ಪ್ರಯತ್ನವಾಗಿದೆ. ಪ್ರಸ್ತುತ ಸರ್ಕಾರದ ಭವಿಷ್ಯದ ಬಗ್ಗೆಯೂ ಅನುಮಾನಗಳಿವೆ ಎಂದು ಅಶೋಕ್ ಹೇಳಿದರು.



