ಬೆಂಗಳೂರು : ಡಿಸಿಎಂ ಡಿ.ಕೆ. ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಬೆಂಗಳೂರಿನ ಸದಾಶಿವನಗರದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿದ್ದಾರೆ. ಈ ದಿಢೀರ್ ಭೇಟಿಯು ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಮುಖ್ಯವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ.
ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ನ ನಾಯಕತ್ವ ಬದಲಾವಣೆ ಕುರಿತು ಸಾಕಷ್ಟು ಊಹಾಪೋಹಗಳು ಹರಿದಾಡುತ್ತಿವೆ. ನವೆಂಬರ್, ಡಿಸೆಂಬರ್ ಮತ್ತು ಈಗ ಜನವರಿ ತಿಂಗಳಲ್ಲೂ ಈ ಚರ್ಚೆ ಮುಂದುವರಿದಿದೆ. ಸಿದ್ದರಾಮಯ್ಯ ಅವರು ದೇವರಾಜ ಅರಸು ಅವರ ದಾಖಲೆಯನ್ನು ಮುರಿದ ನಂತರ ಏನಾದರೂ ಬದಲಾವಣೆ ಆಗುತ್ತದೆಯೇ ಎಂಬ ಪ್ರಶ್ನೆಗಳಿದ್ದವು. ಒಕ್ಕಲಿಗ ಸಮುದಾಯದ ಕಾರ್ಯಕ್ರಮದಲ್ಲಿ ಡಿ.ಕೆ. ಶಿವಕುಮಾರ್ ಅವರು ನೀಡಿದ ಹೇಳಿಕೆಗಳು ಹಾಗೂ ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿಯನ್ನು ಲೀಸ್ ಆಧಾರಿತ ಸಿಎಂ ಎಂದು ಟೀಕಿಸಿದ್ದು ಇಂತಹ ರಾಜಕೀಯ ಬೆಳವಣಿಗೆಗಳಿಗೆ ಮತ್ತಷ್ಟು ಇಂಬು ನೀಡಿದ್ದವು.



