ಬೆಂಗಳೂರು: ವಿವಿಧ ಕಾರಣಗಳಿಂದ ತೆರವಾಗಿರುವ ರಾಜ್ಯದ 223 ಗ್ರಾಮ ಪಂಚಾಯತ್ಗಳ 265 ಸದಸ್ಯ ಸ್ಥಾನಗಳ ಉಪ ಚುನಾವಣೆಗೆ ರಾಜ್ಯ ಚುನಾವಣ ಆಯೋಗ ಮರು ವೇಳಾಪಟ್ಟಿ ಪ್ರಕಟಿಸಿದ್ದು, ಅದರಂತೆ ಮೇ 25ರಂದು ಚುನಾವಣೆ ನಡೆಯಲಿದೆ.
ಈ ಹಿಂದೆ ಮೇ 11ಕ್ಕೆ ಚುನಾವಣೆ ನಿಗದಿಯಾಗಿತ್ತು. ಆದರೆ ಕಾನೂನು ಸುವ್ಯವಸ್ಥೆ ಪರಿಪಾಲನೆ ಹಾಗೂ ಇತರ ಕೆಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ರಾಜ್ಯ ಚುನಾವಣ ಆಯೋಗಕ್ಕೆ ಮನವಿ ಮಾಡಿದ್ದರು. ಅದರಂತೆ 15 ದಿನಗಳ ಮಟ್ಟಿಗೆ ಚುನಾವಣೆ ಮುಂದೂಡಿ ಎಪ್ರಿಲ್ 21ರಂದು ಅಧಿಸೂಚನೆ ಹೊರಡಿಸಲಾಗಿತ್ತು. ಈಗ ಹೊಸ ದಿನಾಂಕ ನಿಗದಿಪಡಿಸಿ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಮೇ 5ರಂದು ಜಿಲ್ಲಾಧಿಕಾರಿಗಳು ಚುನಾವಣ ಅಧಿಸೂಚನೆ ಹೊರಡಿಸಲಿದ್ದಾರೆ. ಮೇ 14ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನ. ಮೇ 15ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ನಾಮಪತ್ರ ವಾಪಸ್ ಪಡೆದುಕೊಳ್ಳಲು ಮೇ 17 ಕೊನೆಯ ದಿನ. ಮೇ 25ರಂದು ಬೆಳಗ್ಗೆ 7ರಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮೇ 27ರಂದು ಮತ ಎಣಿಕೆ ನಡೆಯಲಿದೆ. ಉಪ ಚುನಾವಣೆ ನಡೆಯುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮೇ 5ರಿಂದ 28ರ ವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣ ಆಯೋಗದ ಪ್ರಕಟನೆ ತಿಳಿಸಿದೆ.