ಮಂಡ್ಯ: ಪರಿಸರದಲ್ಲಿರುವ ಗಾಳಿ, ಬೆಳಕು ಮತ್ತು ನೀರು ಮನುಷ್ಯನಿಗೆ ಜೀವ ನೀಡಿದೆ. ನಮ್ಮ ಸುತ್ತ ಮುತ್ತಲಿನ ಪರಿಸರವನ್ನು ಸಂರಕ್ಷಣೆ ಮಾಡುವುದು ಸಾರ್ವಜನಿಕರಾದ ನಮ್ಮೆಲ್ಲರ ಹೊಣೆಯಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ ಕುಮಾರ ಅವರು ಹೇಳಿದರು.
ಗುರುವಾರ ನಗರದ ಕಲ್ಲು ಕಟ್ಟಡ ಕಾಲೇಜಿನ ಆವರಣದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪಂಚಾಯತ್, ಅರಣ್ಯ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಅನನ್ಯ ಹಾರ್ಟ್ ಸಂಸ್ಥೆ (ರಿ). ಅಚೀವರ್ಸ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ಸಾತನೂರು, ಮಂಡ್ಯ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಹಮ್ಮಿಕೊಳ್ಳಲಾಗಿದ್ದ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಮನುಷ್ಯನಿಗೆ ಪ್ರಕೃತಿ ಜೀವಿಸುವ ಸ್ವರ್ಗವನ್ನೇ ಮನುಷ್ಯರಿಗೆ ನೀಡಿದೆ, ಮಾವನವರಾದ ನಾವು ಪರಿಸರವನ್ನು ಉಳಿಸಿಕೊಳ್ಳಬೇಕು, ವಿದ್ಯಾರ್ಥಿಗಳು ಗಿಡಗಳನ್ನು ನೆಟ್ಟಿ ಬೆಳೆಸುವ ಕಾರ್ಯ ಕೈಗೊಳ್ಳಿ. ಹುಟ್ಟು ಹಬ್ಬದ ದಿನಗಳಂದು ಮನೆಯ ಮುಂದೆ 10 ರಿಂದ 15 ಗಿಡಗಳನ್ನು ಬೆಳೆಸುವ ಮೂಲಕ ಹುಟ್ಟು ಹಬ್ಬ ಆಚರಿಸುವ ಆಂದೋಲನವನ್ನು ಪ್ರಾರಂಭಿಸೋಣ ಎಂದರು.
ಆಧುನಿಕ ಯುಗದಲ್ಲಿ ಯುವ ಪೀಳಿಗೆ ಪರಿಸರ ಸಂರಕ್ಷಣೆ ಮಹತ್ವ ಅರಿಯದೆ ಪರಿಸರವನ್ನು ಪೋಷಿಸುವ ಬಗ್ಗೆ ನಿರಾಸಕ್ತಿ ತೋರುತ್ತಿದ್ದಾರೆ. ಪ್ರಸ್ತುತ ಸನ್ನಿವೇಶದಲ್ಲಿ ಶಾಲಾ ಕಾಲೇಜು ಮಕ್ಕಳಿಗೆ ಪರಿಸರದ ಜಾಗೃತಿಯ ಕುರಿತು ಅರಿವು ಮೂಡಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.
ಮುಂದಿನ ಪೀಳಿಗೆಗೆ ಉತ್ತಮ ಪರಿಸರ ನಿರ್ಮಾಣ ಮಾಡಲು ಜಲ, ವಾಯು ಮತ್ತು ಶಬ್ದ ಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಕ್ರಮ ಕೈಗೊಳ್ಳೋಣ ಎಂದು ಕರೆ ನೀಡಿದರು.
ಗಿಡ ನೆಡುವ ಕಾರ್ಯಕ್ರಮ
ವಿಶ್ವ ಪರಿಸರ ದಿನದ ಅಂಗವಾಗಿ ಕಲ್ಲು ಕಟ್ಟಡದ ಕಾಲೇಜಿನ ಅವರಣದಲ್ಲಿ ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಆನಂದ್,ಅವರು ಗಿಡ ನೆಡುವ ಮೂಲಕ ಜಾಗೃತಿ ಮೂಡಿಸಿದರು.
ಇದೇ ಸಂದರ್ಭದಲ್ಲಿ ಸಾಹಯಕ ಅರಣ್ಯ ಸಂರಕ್ಷಣಾಧಿಕಾರಿ ನವ್ಯಶ್ರೀ, ವಕೀಲರ ಸಂಘದ ಅಧ್ಯಕ್ಷರಾದ ರಾಜೇಂದ್ರ, ಮಂಡ್ಯ ಅರಣ್ಯ ವಿಭಾಗ ಎ.ಸಿ.ಎಫ್ ಮಹಾದೇವಸ್ವಾಮಿ, ಕಲ್ಲು ಕಟ್ಟಡ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ತಮ್ಮೇಗೌಡ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತಿಮ್ಮರಾಜು, ರಾಷ್ಟ್ರೀಯ ಯುವ ಪ್ರಶಸ್ತಿ ಪುರಸ್ಕೃತರಾದ ಅನುಪಮ ಬಿ.ಎಸ್ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ನಂತರ ಮೇ 24 ರಂದು ಥೈಲ್ಯಾಂಡ್ನಲ್ಲಿ ನಡೆದ 7 ಅಂತರಾಷ್ಟ್ರೀಯ ಮತ್ತು ಥಾಯ್ ಮಾರ್ಷಲ್ ಆರ್ಟ್ಸ್ ಗೇಮ್ಸ್ ಕಿಕ್ ಬಾಕ್ಸಿಂಗ್ನಲ್ಲಿ ಮಂಡ್ಯದ 9 ವರ್ಷದ ಸೈಯದ್ ಸರ್ಫರಾಜ್ ಅಹ್ಮದ್ ಚಿನ್ನದ ಪದಕ ಪಡೆದು ಜಿಲ್ಲೆಗೆ ಕೀರ್ತಿ ತಂದಿದ್ದಾರೆ ಸೈಯದ್ ಸರ್ಫರಾಜ್ ಅಹ್ಮದ್ ಗೆ ಗಣ್ಯರು ಸನ್ಮಾನಿಸಿ ಗೌರವಿಸಿದರು.