ಸಾಲಿಗ್ರಾಮ: ಕಣ್ಣು ಪ್ರತಿಯೊಬ್ಬರಿಗೂ ಪ್ರಮುಖವಾದ ಅಂಗವಾಗಿದೆ ಎಂದು ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಕಲ್ಲೇಶ್ ಹೇಳಿದರು. ಅವರು ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕ, ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ, ಜಿಲ್ಲಾ ಅಂದತ್ವ ನಿಯಂತ್ರಣ ವಿಭಾಗ, ಸಾಲಿಗ್ರಾಮದ ಸಮುದಾಯ ಆರೋಗ್ಯ ಕೇಂದ್ರ, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು, ನೇತ್ರಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರ ಸಂಯುಕ್ತ ಆಶ್ರಯದಲ್ಲಿ ತಾಲೂಕಿನ ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸಾ ಶಿಬಿರದಲ್ಲಿ ಪಾಲ್ಗೊಂಡು ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿನ ಜನರು ತಮ್ಮ ಬದುಕಿನ ದಿನ ನಿತ್ಯದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಾಗ ಕಣ್ಣಿನ ಬಗ್ಗೆ ಜಾಗೃತಿ ವಯಿಸಬೇಕಾದ ಅಗತ್ಯತೆ ಇದೆ ಎಂದರು. ಮಕ್ಕಳು ಆಟವಾಡುವ ಸಮಯದಲ್ಲಿ ಅವರುಗಳ ಮೇಲೆ ಪೋಷಕರುಗಳು ಸದಾ ಎಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಅವಗಡಗಳು ಸಂಭವಿಸುವ ಸಾಧ್ಯತೆ ಇರುತ್ತದೆ ಎಂದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ವಿಷಯಕ್ಕೂ ಯಾರು ಕೂಡ ಉದಾಸೀನ ತೋರದೆ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆದು ಆರೋಗ್ಯದ ಕಡೆಗೆ ಹೆಚ್ಚಿನ ಗಮನವನ್ನು ಹರಿಸಬೇಕು ಎಂದರು.
ಗ್ರಾ.ಪಂ. ಸದಸ್ಯೆ ಎಸ್.ಆರ್.ಮಂಜುಳಾ ರಮೇಶ್ ಮಾತನಾಡಿ ಆರೋಗ್ಯಕ್ಕೆ ಸಂಬಂಧಿಸಿದಂತಹ ವಿವಿಧ ಉಚಿತ ಶಿಬಿರಗಳನ್ನು ಸಂಘ ಸಂಸ್ಥೆಗಳು ಗ್ರಾಮಾಂತರ ಪ್ರದೇಶಗಳಲ್ಲಿ ಆಯೋಜಿಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ಸೇವೆಯು ಸಿಗುವಂತೆ ಮಾಡಬೇಕು. ಈ ನಿಟ್ಟಿನಲ್ಲಿ ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲೂಕುಗಳಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಸಂಘಟನೆಯು ಹೆಚ್ಚು ಹೆಚ್ಚು ಆರೋಗ್ಯಕ್ಕೆ ಸಂಬಂಧಿಸಿದಂತಹ ಶಿಬಿರಗಳನ್ನು ಕೃಷ್ಣರಾಜನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಆಯೋಜಿಸುವ ಮೂಲಕ ಸಾರ್ವಜನಿಕರ ಉತ್ತಮ ಆರೋಗ್ಯ ಸೇವೆಗೆ ತೊಡಗಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯವಾಗಿದ್ದು ಇತರ ಸಂಘಟನೆಗಳಿಗೆ ಈ ಪ್ರೆಸ್ ಕ್ಲಬ್ ನ ಕಾರ್ಯವು ಮಾದರಿಯಾಗಿದೆ ಎಂದರು.
ಕರ್ನಾಟಕ ಪ್ರೆಸ್ ಕ್ಲಬ್ ಕೆ.ಆರ್.ನಗರ ತಾಲೂಕು ಘಟಕದ ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್ ಮಾತನಾಡಿ ವಿವಿಧ ಇಲಾಖೆಗಳು ಹಾಗೂ ಸಂಘಟನೆಗಳ ಸಹಯೋಗದೊಂದಿಗೆ ಪ್ರೆಸ್ ಕ್ಲಬ್ ತಾಲೂಕಿನಲ್ಲಿ ಹಲವು ಜನಜಾಗೃತಿ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದೆ. ಸಾರ್ವಜನಿಕರು ಗ್ರಾಮೀಣ ಪ್ರದೇಶಗಳಲ್ಲಿ ನಡೆಯುವಂತಹ ಆರೋಗ್ಯಕ್ಕೆ ಸಂಬಂಧಿಸಿದ ಇಂತಹ ಉಚಿತ ಶಿಬಿರಗಳಲ್ಲಿ ಪಾಲ್ಗೊಳ್ಳುವ ಮೂಲಕ ಅದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಉಚಿತವಾಗಿ ಬಿಪಿ ಮತ್ತು ಶುಗರ್ ಪರೀಕ್ಷೆಯನ್ನು ಮಾಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಟಿ.ರಾಮೇಗೌಡ, ಗ್ರಾ.ಪಂ. ಅಧ್ಯಕ್ಷ ಪ್ರದೀಪ್, ಸದಸ್ಯರಾದ ಎಸ್.ಆರ್.ಮಂಜುಳಾ ರಮೇಶ್, ಜಯರಾಮು, ಆರ್.ಮಂಜುಳಾ ಚಂದ್ರು, ನವೀನ್, ಕರ್ನಾಟಕ ಪ್ರೆಸ್ ಕ್ಲಬ್ ತಾಲೂಕು ಅಧ್ಯಕ್ಷ ಕೆ.ಟಿ.ಮೋಹನ್ ಕುಮಾರ್, ನೇತ್ರಾಧಿಕಾರಿ ಶೇಖರ್, ಗ್ರಾಮೀಣ ನಿಧಿ ಸೌಹಾರ್ದ ಕೋ ಆಪರೇಟಿವ್ ಲಿಮಿಟೆಡ್ ನ ಅಧ್ಯಕ್ಷ ಕೆ.ಆರ್.ಶ್ಯಾಮ್ ಸುಂದರ್, ಪಿಡಿಓ ಪುಷ್ಪಕಾಂತ್, ಮುಖಂಡರಾದ ಹೆಚ್.ಟಿ.ಪ್ರಕಾಶ್, ವಸಂತ, ಶಂಕರ ಕಣ್ಣಿನ ಆಸ್ಪತ್ರೆಯ ಶ್ರೀಕಂಠಮೂರ್ತಿ, ಮಂಜುನಾಥ, ಸುನಿಲ್, ಚೇತನಾ, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಚಂದ್ರಕಾಂತಿ, ಶ್ರೀನಿವಾಸ, ಭೂಮಿಕ, ಮಂಜುಳಾ, ಚಾಂದಿನಿ, ಕುಸುಮ, ಜಮುನ, ರಾಮು, ಆಶಾ ಕಾರ್ಯಕರ್ತೆಯರು ಸೇರಿದಂತೆ ಹಲವರು ಇದ್ದರು.
