ಮಂಡ್ಯ : ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಲ್ಲಿ ರೈತರು ಬೆಳೆದಿದ್ದ ಬೆಳೆಗಳು ಸಂಪೂರ್ಣ ಒಣಗಿ ಹೋಗಿದ್ದು, ಅನ್ನದಾತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯನ್ನು ಕೂಡಲೇ ‘ಬರಪೀಡಿತ’ ಎಂದು ಘೋಷಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲಾಯಿತು.
ಜಿಲ್ಲೆಯ ವಿವಿಧೆಡೆ ರೈತರು ಲಕ್ಷಾಂತರ ರೂಪಾಯಿ ಸಾಲ ಮಾಡಿ, ಬಿತ್ತನೆ ಕಾರ್ಯ ಕೈಗೊಂಡಿದ್ದರು. ಆದರೆ, ಸಕಾಲಕ್ಕೆ ಮಳೆ ಬಾರದ ಕಾರಣ ಬೆಳೆಗಳು ನೀರಿಲ್ಲದೆ ಜಮೀನಿನಲ್ಲೇ ಬಾಡಿ ಹೋಗಿವೆ. ಇದರಿಂದಾಗಿ ರೈತರ ಬದುಕು ಅತಂತ್ರವಾಗಿದ್ದು, ಸಾಲದ ಸುಳಿಗೆ ಸಿಲುಕಿದ ರೈತರು ಕಂಗಾಲಾಗಿದ್ದಾರೆ.
ಮಂಡ್ಯ ಜಿಲ್ಲೆಯನ್ನು ತಕ್ಷಣವೇ ಬರಪೀಡಿತ ಜಿಲ್ಲೆ ಎಂದು ಸರ್ಕಾರ ಘೋಷಣೆ ಮಾಡಬೇಕು. ಬೆಳೆ ಕಳೆದುಕೊಂಡ ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು. ಉಳಿದಿರುವ ಬೆಳೆಗಳಿಗಾದರೂ ರಕ್ಷಣೆ ಸಿಗುವಂತೆ ಕಾಲುವೆಗಳಿಗೆ ಕೂಡಲೇ ನೀರು ಹರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ಕರವೇ ಜಿಲ್ಲಾಧ್ಯಕ್ಷ ವೇಣು ಡಿ.ಎಸ್. ಅವರ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, “ಸರ್ಕಾರ ರೈತರ ಕಷ್ಟಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದರು.
ಈ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಕರವೇ ರಾಜ್ಯ ಸಮಿತಿ ಸದಸ್ಯ ಎಂ.ಎಸ್.ಚಿದಂಬರ್, ಸಿ.ಸ್ವಾಮಿಗೌಡ,ರವೀಂದ್ರ, ಕಾಂತರಾಜು, ಸರಸ್ವತಿ, ಸೇರಿದಂತೆ ಇತರರು ಭಾಗಿಯಾಗದ್ದರು.



