ಮಂಡ್ಯ: ರೈತ ಹಿತರಕ್ಷಣಾ ಸಮಿತಿಯಿಂದ ನಗರದ ವಿಶ್ವೇಶ್ವರಯ್ಯ ಪ್ರತಿಮೆ ಬಳಿಯ ಬೆಂ-ಮೈ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು. ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ಖಂಡಿಸಿ ರೈತರು ಧರಣಿ ನಡೆಸಿದರು. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಈ ವೇಳೆ ಮಾತನಾಡಿದ ಮಾಜಿ ವಿಧಾನಪರಿಷತ್ ಸದಸ್ಯ ಕೆ.ಟಿ ಶ್ರೀಕಂಠೇಗೌಡ, ತಮಿಳುನಾಡಿಗೆ ನೀರು ಹರಿಸುವ ಬಗ್ಗೆ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳಬೇಕು. ಈ ಹಿಂದೆ ನಡೆದ ಸರ್ವಪಕ್ಷ ಸಭೆಯಲ್ಲಿ ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸುವುದಿಲ್ಲ ಎಂದು ಮುಖ್ಯಮಂತ್ರಿ ಸೇರಿದಂತೆ ಹಲವರು ಹೇಳಿದ್ದರು. ಆದರೆ ಇದೀಗ ಮತ್ತೆ ಮೂರು ದಿನ ನೀರು ಬಿಡುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇದು ನಾಚಿಕೆಗೇಡಿನ ಸಂಗತಿ. ಈ ಬಗ್ಗೆ ಪ್ರಾಧಿಕಾರದ ಸಭೆಯಲ್ಲಿ ಮನವರಿಕೆ ಮಾಡಲಿ. ರಾಜ್ಯ ಸರ್ಕಾರ ಸರಿಯಾಗಿ ಮನವರಿಕೆ ಮಾಡಿಕೊಡುತ್ತಿಲ್ಲ. ಮನವರಿಕೆ ಮಾಡಿಕೊಟ್ಟು ರಾಜ್ಯ ಸರ್ಕಾರ ನಿರ್ಧಾರ ಕೈಗೊಳ್ಳಬೇಕು. ಹಬ್ಬವನ್ನು ಲೆಕ್ಕಿಸದೆ ನಾವು ರೈತರ ಪರ ಹೋರಾಟ ಮಾಡುತ್ತೇವೆ. ಸರ್ಕಾರ ರೈತರ ರಕ್ಷಣೆ ಮಾಡಬೇಕು ಎಂದು ಹೇಳಿದರು.
ಈಗಾಗಲೇ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿದೆ. ಪ್ರಾಧಿಕಾರದ ಸೂಚನೆ ಗಮನಿಸುತ್ತೇವೆ. ರಾಜ್ಯ ಸರ್ಕಾರದ ನಿಲುವನ್ನು ನೋಡುತ್ತೇವೆ. ತಮಿಳುನಾಡಿಗೆ ನ್ಯಾಯ ಸಿಕ್ಕಿಲ್ಲ ಎಂಬ ಹೇಳಿಕೆ ಸರ್ಕಾರದಿಂದ ಬಂದಿದೆ. ಪದೇ ಪದೇ ರೈತರ ತಾಳ್ಮೆಯನ್ನು ಕೆಣಕಬೇಡಿ.ರಾಜ್ಯದಲ್ಲಿ ಮಳೆಯಾಗಿಲ್ಲ. ಕುಡಿಯುವ ನೀರಿಗೂ ಹಾಹಾಕಾರ ಎದ್ದಿದೆ. ಮತ್ತೆ ನೀರು ಬಿಟ್ಟರೆ ನಮ್ಮ ಹೋರಾಟ ಉಗ್ರ ಸ್ವರೂಪ ಪಡೆಯಲಿದೆ ಎಂದು ರೈತ ನಾಯಕಿ ಸುನಂದಾ ಜಯರಾಂ ಎಚ್ಚರಿಕೆ ನೀಡಿದರು. ಪ್ರತಿಭಟನಾ ಧರಣಿಯಲ್ಲಿ ಮಾಜಿ ಶಾಸಕ ಜಿ. ಬಿ. ಶಿವಕುಮಾರ್, ರೈತ ನಾಯಕಿ ಸುನಂದಾ ಜಯರಾಂ, ಕನ್ನಡ ಸೇನೆ ಮಂಜುನಾಥ್, ಸೇರಿದಂತೆ ಹಲವರು ಭಾಗಿಯಾಗಿದ್ದರು.