ವರದಿ: ಸತೀಶ್ ಆರಾಧ್ಯ
ಪಿರಿಯಾಪಟ್ಟಣ: ಉತ್ತಮ ಆರೋಗ್ಯಕರ ಜೀವನ ನಡೆಸಲು ಪರಿಸರ ಸಂರಕ್ಷಣೆಗೆ ನಾವೆಲ್ಲ ಮುಂದಾಗಬೇಕಿದೆ ಎಂದು ವಲಯ ಅರಣ್ಯಾಧಿಕಾರಿ ಕಿರಣ್ ಕುಮಾರ್ ತಿಳಿಸಿದರು.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಚಾಣಕ್ಯ ವಿದ್ಯಾಸಂಸ್ಥೆಯಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು, ನಾವೆಲ್ಲರೂ ಉಸಿರಾಡಲು ಆಮ್ಲಜನಕದ ಅವಶ್ಯಕತೆಯಿದೆ ನಮ್ಮ ಸುತ್ತಮುತ್ತಲಿನ ಖಾಲಿ ಜಾಗಗಳಲ್ಲಿ ಗಿಡ ಮರಗಳನ್ನು ಬೆಳೆಸುವುದರ ಮೂಲಕ ಆಮ್ಲಜನಕ ಹೆಚ್ಚು ಉತ್ಪಾದನೆ ಆಗುವಂತೆ ನೋಡಿಕೊಂಡು ಪರಿಸರ ಸಂರಕ್ಷಣೆಗೆ ಮುಂದಾಗಿ ಕಲುಷಿತ ವಾತಾವರಣವನ್ನು ಹಿಮ್ಮೆಟ್ಟಿಸುವ ಮೂಲಕ ಉತ್ತಮ ವಾತಾವರಣ ನಿರ್ಮಾಣದ ಗುರಿ ನಮ್ಮೆಲ್ಲರ ಮೇಲಿದೆ ಎಂದರು.

ಸಂಸ್ಥೆಯ ಅಧ್ಯಕ್ಷರಾದ ಜಗದೀಶ್ ಅವರು ಮಾತನಾಡಿ ಪರಿಸರ ಸಂರಕ್ಷಣೆ ಮಾಡುವಲ್ಲಿ ವಿದ್ಯಾರ್ಥಿಗಳ ಪಾತ್ರ ಅಪಾರವಾಗಿದ್ದು ಖಾಲಿ ಜಾಗಗಳಲ್ಲಿ ಗಿಡಗಳನ್ನು ನೆಟ್ಟು ಅದನ್ನು ಪೋಷಿಸಿ ಮುಂದಿನ ಪೀಳಿಗೆಗೆ ಉತ್ತಮ ವಾತಾವರಣ ನಿರ್ಮಿಸುವ ಗುರಿ ಹೊಂದಿ ನಮ್ಮ ಪೋಷಕರು ಹಾಗೂ ಇತರರಿಗೂ ಪರಿಸರ ಜಾಗೃತಿ ಬಗ್ಗೆ ಅರಿವು ಮೂಡಿಸಬೇಕು ಎಂದರು.
ಸಂಸ್ಥೆಯ ಮುಖ್ಯ ಶಿಕ್ಷಕ ತಿಮ್ಮಯ್ಯ ಅವರು ಮಾತನಾಡಿ ನಮ್ಮ ಸುತ್ತ ಮುತ್ತಲಿನ ವಾತಾವರಣ ಅಶುದ್ಧತೆಯಿಂದ ಕೂಡಿದ್ದರೆ ಕಾಯಿಲೆಗಳು ಹೆಚ್ಚಾಗುತ್ತವೆ ಇದನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಗಿಡಮರಗಳನ್ನು ಹೆಚ್ಚು ಬೆಳೆಸುವುದರ ಮೂಲಕ ಉತ್ತಮ ವಾತಾವರಣ ನಿರ್ಮಿಸಬೇಕು ಎಂದರು.
ಈ ವೇಳೆ ಶಾಲಾ ಆವರಣದಲ್ಲಿ ಸಸಿಗಳನ್ನು ನೆಟ್ಟು ನೀರೆರೆಯಲಾಯಿತು, ಈ ಸಂದರ್ಭ ಸಂಸ್ಥೆಯ ನಿರ್ದೇಶಕರಾದ ಧನಂಜಯ್, ಅನಿಲ್, ಯದುರಾಜ್, ಹರೀಶ್, ಜಯಣ್ಣ ಹಾಗೂ ಸಂಸ್ಥೆಯ ಶಿಕ್ಷಕರು ಪೋಷಕರು ಶಾಲಾ ವಿದ್ಯಾರ್ಥಿಗಳು ಬೋಧಕೇತರ ಸಿಬ್ಬಂದಿ ಇದ್ದರು.