ಬೆಂಗಳೂರು: ರಾಜ್ಯ ಮತ್ತು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಉದ್ಯಮಿಗಳ ಸಮಸ್ಯೆಗಳನ್ನು ಶೀಘ್ರವಾಗಿ ಪರಿಹರಿಸಲು ಸರ್ಕಾರ ಬದ್ಧವಾಗಿದೆ ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (ಎಫ್ಕೆಸಿಸಿಐ) ಆಯೋಜಿಸಿದ್ದ ‘ಇ-ಖಾತಾ ಮತ್ತು ನಗರಾಭಿವೃದ್ಧಿ’ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅತಿ ಹೆಚ್ಚು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿರುವುದು ಎಂಎಸ್ಎಂಇ ವಲಯವೇ ಎಂದು ಹೇಳಿದರು. ದೇಶದ ಜಿಡಿಪಿಗೆ ಶೇ.31ರಷ್ಟು ಹಾಗೂ ರಫ್ತಿಗೆ ಶೇ.45ರಿಂದ 48ರಷ್ಟು ಕೊಡುಗೆ ನೀಡುತ್ತಿರುವ ಈ ವಲಯವನ್ನು ಯಾವುದೇ ಸರ್ಕಾರ ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.
ಗ್ರಾಮ ಪಂಚಾಯಿತಿ ಅಥವಾ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಮಹಾನಗರ ಪಾಲಿಕೆ ವ್ಯಾಪ್ತಿಗೆ ಸೇರ್ಪಡೆಯಾಗಿರುವ ಕೈಗಾರಿಕಾ ಪ್ರದೇಶಗಳ ಆಸ್ತಿ ತೆರಿಗೆ ಗೊಂದಲಗಳನ್ನು ಕೆಐಎಡಿಬಿ ಅಧಿಕಾರಿಗಳೊಂದಿಗೆ ಚರ್ಚಿಸಿ ಬಗೆಹರಿಸಲಾಗುವುದು ಎಂದು ತಿಳಿಸಿದರು. ಇ-ಖಾತಾ ವ್ಯವಸ್ಥೆಯನ್ನು ಪಾರದರ್ಶಕತೆ ಮತ್ತು ತ್ವರಿತ ಸೇವೆಗಾಗಿ ಜಾರಿಗೆ ತರಲಾಗಿದ್ದು, ನಗರಾಭಿವೃದ್ಧಿ ಇಲಾಖೆಯ 20.26 ಲಕ್ಷ ಆಸ್ತಿಗಳ ಪೈಕಿ ಶೇ.40ರಷ್ಟು ಆಸ್ತಿಗಳಿಗೆ ಮಾತ್ರ ಇ-ಖಾತಾ ನೀಡಲಾಗಿದೆ ಎಂದರು.
ತಾಂತ್ರಿಕ ತೊಂದರೆಗಳು ಹಾಗೂ ಕಾಗುಣಿತ ದೋಷಗಳ ತಿದ್ದುಪಡಿಯನ್ನು ಇನ್ನಷ್ಟು ಸರಳಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಕೈಗಾರಿಕಾ ಪ್ರದೇಶಗಳಿಗೆ ಟ್ಯಾಂಕರ್ ಮುಕ್ತ ನೀರು ಸರಬರಾಜು, ಒಳಚರಂಡಿ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಉದ್ಯಮಿಗಳಿಗೆ ವಿವಿಧ ಇಲಾಖೆಗಳ ಅನುಮತಿ ಮತ್ತು ಪ್ರಮಾಣಪತ್ರಗಳಿಗಾಗಿ ಆಗುವ ವಿಳಂಬ ತಪ್ಪಿಸಲು ಕೈಗಾರಿಕೆಗಳಿಗೆ ವಿಶೇಷ ‘ಏಕಗವಾಕ್ಷಿ’ ವ್ಯವಸ್ಥೆ ಜಾರಿಗೆ ತರುವ ಬಗ್ಗೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು. ಉದ್ಯಮಿಗಳ ಸಮಸ್ಯೆಗಳ ಕುರಿತು ಎಫ್ಕೆಸಿಸಿಐ ನೀಡುವ ಲಿಖಿತ ವರದಿಯನ್ನು ಆಧರಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಬಿ.ಬಿ.ಕಾವೇರಿ, ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ ಅಧ್ಯಕ್ಷರಾದ ಉಮಾ ರೆಡ್ಡಿ, ನಿಕಟಪೂರ್ವ ಅಧ್ಯಕ್ಷ ಆರ್. ಶಿವಕುಮಾರ್, ಹಿರಿಯ ಉಪಾಧ್ಯಕ್ಷ ಸಾಯಿರಾಂ ಪ್ರಸಾದ್, ಉಪಾಧ್ಯಕ್ಷ ಶಶಿಧರ್, ಅರವಿಂದ್ ಬುರ್ಜಿ, ತಲ್ಲಂ ವೆಂಕಟೇಶ್, ಸುಗ್ನೇನ್ ಹಿರೇಮಠ್ ಸೇರಿದಂತೆ FKCCIಯ ಪದಾಧಿಕಾರಿಗಳು, ವಿವಿಧ ಕೈಗಾರಿಕಾ ಸಂಘಗಳ ಪ್ರತಿನಿಧಿಗಳು ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.



