ರಾಮನಗರ: ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರಿಗೆ ೬ನೇ ಗ್ಯಾರಂಟಿ ಘೋಷಣೆ ಈಡೇರಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಿಳಿಸಿದರು. ಅವರು ಫೆ. ೨೯ರ ಗುರುವಾರ ತಾಲ್ಲೂಕು ಅಡಳಿತ ಮತ್ತು ತಾಲ್ಲೂಕು ಪಂಚಾಯತ್ ವತಿಯಿಂದ ಮಾಗಡಿ ಕೋಟೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗೃಹಲಕ್ಷ್ಮೀ ಯೋಜನೆಯಡಿ ಒಂದು ವರ್ಷದಲ್ಲಿ ೨೪ ಸಾವಿರ ರೂ.ಗಳ ಹಣವನ್ನು ಯಾವುದೇ ಮಧ್ಯವರ್ತಿಗಳ ಹಾವಳಿ ಇಲ್ಲದೆ ಮಹಿಳೆಯರ ಖಾತೆಗೆ ನೇರವಾಗಿ ಬ್ಯಾಂಕಿನ ಮೂಲಕ ಹಣ ಜಮೆಯಾಗುತ್ತಿದೆ. ರಾಜ್ಯದ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದು, ಮಾಗಡಿ ತಾಲ್ಲೂಕಿನಲ್ಲಿ ೫೬ ಸಾವಿರ ಕುಟುಂಬಗಳು ಗೃಹಲಕ್ಷ್ಮೀ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, ಒಟ್ಟು ೫೧ ಸಾವಿರ ಕುಟುಂಬದ ಯಜಮಾನಿಗೆ ಹಣ ಜಮೆಯಾಗುತ್ತಿದೆ ಎಂದರು. ಮಾಗಡಿ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರಾದ ಎಚ್.ಸಿ. ಬಾಲಕೃಷ ಮಾತನಾಡಿ, ಸರ್ಕಾರ ಅಧಿಕಾರಕ್ಕೆ ಬಂದ ಆರು ತಿಂಗಳೊಳಗೆ ೫ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಮಾಗಡಿ ತಾಲ್ಲೂಕಿನಲ್ಲಿ ೫೦ ಕೋಟಿ ವೆಚ್ಚದಲ್ಲಿ ಕೋಟೆ ಅಭಿವೃದ್ಧಿ ಮತ್ತು ಮುಂದಿನ ಒಂದು ವರ್ಷದಲ್ಲಿ ಎಂಟು ಕೋಟಿ ರೂ. ವೆಚ್ಚದಲ್ಲಿ ಗುರುಭವನವನ್ನು ಉದ್ಘಾಟನೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದರಾದ ಡಿ.ಕೆ. ಸುರೇಶ್ ಮಾತನಾಡಿ, ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಬಡವರು ಮತ್ತು ಮಧ್ಯಮ ವರ್ಗದವರ ಗಮನದಲ್ಲಿಟ್ಟುಕೊಂಡು ಜಾರಿಗೆ ಜಾರಿಗೆ ತರಲಾಗಿದೆ. ಮಾಗಡಿಯ ಪ್ರತಿಯೊಂದು ಮನೆಗಳಿಗೂ ಕುಡಿಯುವ ನೀರನ ವ್ಯವಸ್ಥೆ ಮಾಡಲಾಗಿದೆ ಎಂದರು. ರಾಮನಗರದಲ್ಲಿ ರೈತರಿಗೆ ಸಮಸ್ಯೆ ಇದೆ, ಪೋಡಿ ದುರಸ್ಥಿ ಬಗ್ಗೆ ೧೫ಕ್ಕೂ ಹೆಚ್ಚು ಸಭೆಗಳನ್ನು ಮಾಡಲಾಗಿದ್ದು, ಬಡವರಿಗೆ ಉಚಿತವಾಗಿ ನಿವೇಶನ ನೀಡಲು ತಾಲ್ಲೂಕು ಅಡಳಿತ ಅಧಿಕಾರಿಗಳು ಒಂದು ಸಾವಿರ ನಿವೇಶನ ಮತ್ತು ೧೬೨ ಎಕರೆ ಜಾಗವನ್ನು ಗುರುತಿಸಿದ್ದಾರೆ. ಮುಂದಿನ ದಿನಗಳಲ್ಲಿ ಹತ್ತು ಹಲವು ಯೋಜನೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕಾರ್ಯಕ್ರಮಗಳನ್ನು ಮಾಡಲಾಗುವುದು ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಫಲಾನುಭವಿಗಗಳಿಗೆ ಇ-ಸ್ವತ್ತು ವಿತರಿಸಲಾಯಿತು. ವಿಧಾನ ಪರಿಷತ್ ಸದಸ್ಯರಾದ ಎಸ್. ರವಿ, ಜಿಲ್ಲಾಧಿಕಾರಿ ಡಾ. ಅವಿನಾಶ್ ಮೆನನ್ ರಾಜೇಂದ್ರನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ದಿಗ್ವಿಜಯ್ ಬೋಡ್ಕೆ, ಅಪರ ಜಿಲ್ಲಾಧಿಕಾರಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿ ಬಿನೋಯ್, ಮಾಗಡಿ ತಹಶೀಲ್ದಾರ್ ಸುರೇಂದ್ರ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.