Monday, April 7, 2025
Google search engine

Homeರಾಜಕೀಯಗ್ಯಾರಂಟಿ | ಹಿಮಾಚಲದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಆಶ್ಚರ್ಯವೇನಿಲ್ಲ: ವಿಜಯೇಂದ್ರ

ಗ್ಯಾರಂಟಿ | ಹಿಮಾಚಲದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಆಶ್ಚರ್ಯವೇನಿಲ್ಲ: ವಿಜಯೇಂದ್ರ

ಬೆಂಗಳೂರು: ಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿ ವಾಪಸ್‌ ಅಭಿಯಾನ ಆರಂಭವಾಗಿದೆ. ಅಲ್ಲಿಯ ಸ್ಥಿತಿ ಕರ್ನಾಟಕಕ್ಕೆ ಬಂದರೂ ಅದರಲ್ಲಿ ಆಶ್ಚರ್ಯವೇನಿಲ್ಲ. ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸರಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಅವರು, “ಸರಕಾರದ ಆರ್ಥಿಕ ಸಂಪನ್ಮೂಲವನ್ನು ಆಧರಿಸಿ ಸಮತೋಲನ ಕಾಯ್ದುಕೊಳ್ಳುವಲ್ಲಿ ವಿಫಲರಾಗಿ ತಾವು ನೀಡುವ ಪೊಳ್ಳು ಭರವಸೆಗಳಿಗೆ ಹಣ ಒದಗಿಸಲಾಗದೇ ಯೋಜನೆಗಳು ಹೇಗೆ ವೈಫಲ್ಯ ಸಾಧಿಸುತ್ತವೆ ಎನ್ನುವುದಕ್ಕೆ ಕಾಂಗ್ರೆಸ್ ಆಡಳಿತದ ಹಿಮಾಚಲ ಪ್ರದೇಶ ಸರಕಾರ ಸಾಕ್ಷಿ ಒದಗಿಸಿದೆ” ಎಂದು ಹೇಳಿದ್ದಾರೆ.

ʼಕರ್ನಾಟಕದಲ್ಲೂ ಸಹ ಪಂಚ ಗ್ಯಾರಂಟಿಗಳನ್ನು ನಿರ್ವಹಿಸುವಲ್ಲಿ ಗೊಂದಲಗಳನ್ನು ಸೃಷ್ಟಿಸಿಕೊಳ್ಳುತ್ತಿರುವ ಕಾಂಗ್ರೆಸ್ ಸರಕಾರ ಶಕ್ತಿ ಯೋಜನೆಯಲ್ಲಿ ಈಗಾಗಲೇ ನಷ್ಟವನ್ನು ಅನುಭವಿಸಿದ್ದು, ಸಾರಿಗೆ ಇಲಾಖೆಯ ನಾಲ್ಕೂ ನಿಗಮಗಳಿಗೆ ಬಡ್ಡಿರಹಿತವಾಗಿ 2 ಸಾವಿರ ಕೋಟಿ ರೂ ಸಾಲ ನೀಡಲು ಮುಂದಾಗಿದೆʼ ಎಂದು ವಾಗ್ದಾಳಿ ನಡೆಸಿದ್ದಾರೆ.

ʼಗೃಹ ಜ್ಯೋತಿ ಯೋಜನೆಯ ನಷ್ಟವನ್ನು ಸರಿದೂಗಿಸಲು ವಾಣಿಜ್ಯ ಹಾಗೂ ಉತ್ಪಾದಕ ವಲಯದ ಮೇಲೆ ವಿದ್ಯುತ್ ದರ ಹೆಚ್ಚಿಸಿರುವುದರ ಪರಿಣಾಮ, ಪರೋಕ್ಷವಾಗಿ ಜನ ಸಾಮಾನ್ಯರು ಇದರ ಬಿಸಿ ಅನುಭವಿಸುವಂತಾಗಿದೆ. ಗೃಹ ಲಕ್ಷ್ಮಿ ಯೋಜನೆಗೆ ಹಣ ಹೊಂದಿಸಲಾಗದೆ ಚುನಾವಣಾ ಸಂದರ್ಭದಲ್ಲಿ ಮಾತ್ರ ಉಳಿಸಿಕೊಂಡಿರುವ ಬಾಕಿ ಕಂತುಗಳನ್ನು ಪಾವತಿಸಿ ಯೋಜನೆಯನ್ನು ಮತಬ್ಯಾಂಕ್ ಸೃಷ್ಟಿಸಿಕೊಳ್ಳಲು ಮಾತ್ರ ಬಳಸಿಕೊಳ್ಳಲಾಗುತ್ತಿದೆ. ಯುವನಿಧಿ ಯೋಜನೆ ಯುವ ಜನರ ಪಾಲಿಗೆ ಗಗನಕುಸುಮವಾಗಿಯೇ ಉಳಿದಿದೆʼ ಎಂದು ಆಕ್ರೋಶ ಹೊರಹಾಕಿದ್ದಾರೆ.

ʼಸಮಾಜ ಹಾಗೂ ನಾಡನ್ನು ಕಟ್ಟುವ ಮಾನವ ಸಂಪನ್ಮೂಲದ ಪ್ರಮುಖ ಭಾಗವಾಗಿರುವ ರೈತಾಪಿ ವರ್ಗ, ಶ್ರಮಿಕರು,ಯುವ ಜನರು, ವಿದ್ಯಾರ್ಥಿಗಳ ಹಾಗೂ ಮಹಿಳೆಯರ ಭವಿಷ್ಯಕ್ಕಾಗಿ ಯಾವುದೇ ಯೋಜನೆ ರೂಪಿಸದೇ ಕಾಂಗ್ರೆಸ್ ಸರಕಾರ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ ಆಡಳಿತ ನೀಡುವ ಮೂಲಕ ತನ್ನ ಖಜಾನೆ ಬರಿದು ಮಾಡಿಕೊಂಡಿದೆ, ಇದು ನಾಡಿನ ಜನರಿಗೆ ತಿಳಿಯದ ವಿಷಯವೇನಲ್ಲ, ಏಕೆಂದರೆ ಇದರ ಪರಿಣಾಮವನ್ನು ತೆರಿಗೆದಾರರು ನಿತ್ಯ ಅನುಭವಿಸುತ್ತಲೇ ಇದ್ದಾರೆʼ ಎಂದು ಹೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಹಿಂತೆಗೆದುಕೊಳ್ಳುತ್ತಿರುವ ಹಿಮಾಚಲ ಪ್ರದೇಶ ಸರಕಾರದ ಸ್ಥಿತಿ ಕರ್ನಾಟಕಕ್ಕೆ ಬಂದರೂ ಅದರಲ್ಲಿ ಆಶ್ಚರ್ಯವೇನಿಲ್ಲ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರಕ್ಕೆ ಜನತೆಗೆ ನೀಡಿರುವ ವಚನ ಪಾಲನೆ ಹಾಗೂ ಜಾರಿಗೊಳಿಸಿರುವ ಯೋಜನೆಯನ್ನು ಸರಿದೂಗಿಸುವ ಬದ್ಧತೆ ಇದ್ದರೆ ಈ ಕೂಡಲೇ ಗ್ಯಾರಂಟಿ ಯೋಜನೆಗಳನ್ನು ಸರಿದೂಗಿಸಲು ರಾಜ್ಯದ ಆರ್ಥಿಕ ಸಂಪನ್ಮೂಲವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಯೋಜನೆಗಳನ್ನು ಪರಿಚಯಿಸುವ ಬದ್ಧತೆ ಪ್ರದರ್ಶಿಸಲಿ ಎಂದು ಆಗ್ರಹಿಸಿದ್ದಾರೆ.

RELATED ARTICLES
- Advertisment -
Google search engine

Most Popular