ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮೈಸೂರು ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಮತ್ತು ಜೆಡಿಎಸ್ ನಾಯಕರು ತಪ್ಪು ಮುಚ್ಚಿಕೊಳ್ಳಲು ಸಿದ್ದರಾಮಯ್ಯ ವಿರುದ್ಧ ಆರೋಪ ಮಾಡುತ್ತಿದ್ದಾರೆ. ಆದರೆ, ಕುಮಾರಸ್ವಾಮಿ ಯಾವ ರೀತಿ ನಿವೇಶನ ಪಡೆದಿದ್ದಾರೆ ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಶೀಘ್ರವೇ ದಾಖಲೆ ಬಿಡುಗಡೆ ಮಾಡುವೆ ಎಂದು ಹೇಳಿದರು.
ಬಿಜೆಪಿ ನಾಯಕರು ಜಮೀನಿನ ಮೂಲ ಮಾಲೀಕ ಎನ್ನುತ್ತಿರುವ ನಿಂಗ ಎಂಬುವರ ಮೊಮ್ಮಕ್ಕಳ ಮುಖಾಂತರ ಜಿಲ್ಲಾಧಿಕಾರಿಗಳಿಗೆ ದೂರು ಕೊಡಿಸಿದ್ದಾರೆ. ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ತಪ್ಪಿತಸ್ಥರು ಎಂದು ಬಿಂಬಿಸುವ ಪ್ರಯತ್ನ ಆಗುತ್ತಿದೆ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಾಯಕರ ಪಾತ್ರವೇ ಹೆಚ್ಚಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪಾಲು ಕೂಡ ಇದೆ. ಸಂಬಂಧಿಕರ ಮುಖಾಂತರ ವಿಜಯೇಂದ್ರ ಅಕ್ರಮ ಎಸಗಿದ್ದಾರೆ ಎಂದು ದೂರಿದರು.