ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರಕ್ಕೆ ಇನ್ನೆಷ್ಟು ದಿನ ಜೀವ ಇರುತ್ತದೋ ಗೊತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ಅರಮನೆ ಮೈದಾನದಲ್ಲಿಂದು ಏರ್ಪಡಿಸಿದ ಬಿಜೆಪಿ ರಾಜ್ಯ ವಿಶೇಷ ಕಾರ್ಯಕಾರಿಣಿಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, . ಕಾಂಗ್ರೆಸ್ ಸರಕಾರದ ಪಾಪದ ಕೊಡ ತುಂಬುತ್ತಿದೆ. ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸಬೇಕು ಎಂದ ಅವರು, ರಾಜ್ಯದ ಕಾಂಗ್ರೆಸ್ ಸರಕಾರ ಎಷ್ಟು ದಿನ ಇರುತ್ತದೆಯೋ ಗೊತ್ತಿಲ್ಲ. ಸರಕಾರಕ್ಕೆ ಅಸ್ಥಿರತೆ ಕಾಡುತ್ತಿದೆ. ಕಾಂಗ್ರೆಸ್ ಒಳಜಗಳ ಮಿತಿ ಮೀರಿದೆ. ಹಾದಿ ಬೀದಿ ಹೊಡೆದಾಟ ಮುಂದುವರೆದಿದೆ. ಸಿಎಂ ಸ್ಥಾನಕ್ಕಾಗಿ ಕೂಗು, ಉಪ ಮುಖ್ಯಮಂತ್ರಿಗಾಗಿ ಕೂಗು, ಅಭಿವೃದ್ಧಿಗಾಗಿ ಹಣ ಕೇಳಿ ಕೂಗು ಕೇಳಿಸುತ್ತಿದೆ ಎಂದು ವಿಶ್ಲೇಷಿಸಿದರು.
ನರೇಂದ್ರ ಮೋದಿಜೀ ಅವರು ೩ನೇ ಬಾರಿಗೆ ಅಧಿಕಾರಕ್ಕೆ ಏರಿದ್ದಾರೆ. ಇದು ದೇಶದ ಕಾರ್ಯಕರ್ತರ ಪರಿಶ್ರಮದ ಫಲ; ಇದೊಂದು ಐತಿಹಾಸಿಕ ಗೆಲುವು ಎಂದರು. ಇಂಡಿ ಒಕ್ಕೂಟ ಪೊಳ್ಳು ಭರವಸೆ ಮೂಲಕ ಅಧಿಕಾರ ಪಡೆಯಲು ಯತ್ನಿಸಿತ್ತು. ಆದರೆ, ಪ್ರಜ್ಞಾವಂತ ಮತದಾರರು ಅವರ ಷಡ್ಯಂತ್ರವನ್ನು ಬೆಂಬಲಿಸಲಿಲ್ಲ ಎಂದು ತಿಳಿಸಿದರು.