ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.
ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಂದಾಯ ಗುಪ್ತಚರ ನಿರ್ದೇಶನಾಲಯಕ್ಕೆ (ಡಿಆರ್ಐ) ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಏಪ್ರಿಲ್ 17ಕ್ಕೆ ಮುಂದೂಡಿದೆ.
ಚಿನ್ನ ಕಳ್ಳಸಾಗಣೆ ಆರೋಪ ಪ್ರಕರಣದಲ್ಲಿ ಮಾರ್ಚ್ 3ರಂದು ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರನ್ಯಾ ಅವರನ್ನು ಬಂಧಿಸಿ, 14 ಕೆ.ಜಿ. ಚಿನ್ನವನ್ನು ಡಿಆರ್ಐ ಅಧಿಕಾರಿಗಳು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ವಹಿಸಿದ್ದರು.
ಜಾಮೀನು ಕೋರಿ ರನ್ಯಾ ರಾವ್ ನಗರದ 64ನೇ ಸಿಸಿಎಚ್ ನ್ಯಾಯಾಲಯಕ್ಕೆ (ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ) ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ವೇಳೆ ಡಿಆರ್ಐ ಪರ ವಕೀಲರು, ”ಅರ್ಜಿದಾರರಾದ ಆರೋಪಿಗೆ ಪ್ರಭಾವಿಗಳ ನಂಟಿರುವುದು ತನಿಖೆ ವೇಳೆ ಗೊತ್ತಾಗಿದೆ. ಜಾಮೀನು ಮಂಜೂರು ಮಾಡಿದರೆ ತನಿಖೆಯ ಹಾದಿ ತಪ್ಪಿಸುವ ಸಾಧ್ಯತೆಯಿದೆ.
ಸಾಕ್ಷ್ಯ ನಾಶಪಡಿಸಿ, ವಿದೇಶಕ್ಕೂ ಪರಾರಿಯಾಗುವ ಅನುಮಾನವಿದೆ. ಒಂದು ವರ್ಷದ ಅವಧಿಯಲ್ಲಿ ಆರೋಪಿ 25ಕ್ಕೂ ಹೆಚ್ಚು ಬಾರಿ ವಿದೇಶ ಪ್ರಯಾಣ ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಆರೋಪಿಗೆ ಜಾಮೀನು ಮಂಜೂರು ಮಾಡಬಾರದು” ನ್ಯಾಯಾಲಯಕ್ಕೆ ಕೋರಿದ್ದರು. ವಾದ ಆಲಿಸಿದ್ದ ಪೀಠ, ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ರನ್ಯಾ ರಾವ್ ಇದೀಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.