ಬೆಂಗಳೂರು : ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ 500 ರೂಪಾಯಿ ಬೆಟ್ಟಿಂಗ್ ಪ್ರಕರಣ ಎಲ್ಲೆಡೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಇದೀಗ ಹೋಂ ಮಿನಿಸ್ಟರ್ ಪರಮೇಶ್ವರ್ ತಮ್ಮ ವಿರುದ್ಧ 42ನೇ ACJM ಕೋರ್ಟ್ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ತುಮಕೂರಿನಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ಅತಿಥಿಯಾಗಿ ಭಾಗವಹಿಸಿ ಅನಧಿಕೃತ ಬೆಟ್ಟಿಂಗ್ ಕಟ್ಟಿ ಅಪರಾಧ ಕೃತ್ಯ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿ ಎಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿತ್ತು. ಅದರಂತೆ ಮಧುಗಿರಿ ತಾಲ್ಲೂಕಿನ ಹಂದ್ರಾಳು ಗ್ರಾಮದ ಎಚ್.ಆರ್.ನಾಗಭೂಷಣ್ ಸಲ್ಲಿಸಿರುವ ಖಾಸಗಿ ದೂರಿನ ವಿಚಾರಣೆ ನಡೆಸಿದ ನ್ಯಾಯಾಲಯ ಮಧುಗಿರಿ ತಾಲ್ಲೂಕು ಕೊಡಿಗೇನಹಳ್ಳಿ ಪೊಲೀಸ್ ಠಾಣಾಧಿಕಾರಿಗೆ ಆದೇಶಿಸಿದ್ದು, FIR ಸಿದ್ಧಪಡಿಸಿ ಕಳುಹಿಸುವಂತೆ ನಿರ್ದೇಶಿಸಿದೆ.
2025ರ ಅಕ್ಟೋಬರ್ 19ರಂದು ತುಮಕೂರು ನಗರದಲ್ಲಿ ನಡೆದಿದ್ದ ಕಬಡ್ಡಿ ಪಂದ್ಯದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ತಂಡದ ವಿರುದ್ಧ 500 ಬೆಟ್ಟಿಂಗ್ ಕಟ್ಟುವ ಮೂಲಕ ಅಪರಾಧ ಕೃತ್ಯಗಳನ್ನು ಎಸಗಲು ಸಾರ್ವಜನಿಕವಾಗಿ ಪ್ರಚೋದನೆ ನೀಡಿದ್ದು, ಜಿಲ್ಲೆಯಲ್ಲಿ ಪದೇ ಪದೇ ಅಪರಾಧಿಕ ಕೃತ್ಯಗಳನ್ನು ಎಸಗುತ್ತಿದ್ದಾರೆ.
ಇನ್ನೂ ಈ ಬೆಟ್ಟಿಂಗ್ನಲ್ಲಿ ಭಾಗಿಯಾಗಿರುವ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ವಿರುದ್ಧವೂ ಕರ್ನಾಟಕ ಪೊಲೀಸ್ ಹಾಗೂ ಬಿಎನ್ಎಸ್ ಕಾಯ್ದೆಯ ವಿವಿಧ ಕಲಂಗಳ ಅಡಿಯಲ್ಲಿ FIR ದಾಖಲಿಸಬೇಕು ಎಂದು ಕೋರಿ ಖಾಸಗಿ ದೂರು ಸಲ್ಲಿಸಲಾಗಿದೆ.



