ಬೆಂಗಳೂರು: ಕರ್ನಾಟಕದ ವಕ್ಫ್ ಮಂಡಳಿಗೆ ಸಂಬಂಧಿಸಿದ ಎಲ್ಲ ಬಗೆಯ ಜಮೀನು ನೋಂದಣಿಯನ್ನು ಸ್ಥಗಿತಗೊಳಿಸಲು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚಿಸಬೇಕೆಂದು ಕೋರಿ ಪ್ರತಿಪಕ್ಷ ನಾಯಕ ಆರ್.ಅಶೋಕ ಕೇಂದ್ರ ಸಚಿವರಿಗೆ ಹಾಗೂ ವಕ್ಫ್ ಜಂಟಿ ಸಮಿತಿಗೆ ಪತ್ರ ಬರೆದಿದ್ದಾರೆ.
ರೈತರ ಜಮೀನು ಹಾಗೂ ಹಿಂದೂ ಸಂಸ್ಥೆಗಳಿಗೆ ಸಂಬಂಧಿಸಿದ ಜಮೀನುಗಳನ್ನು ವಕ್ಫ್ ಮಂಡಳಿ ಕಬಳಿಸುತ್ತಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು, ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ.ಪಿ.ನಡ್ಡಾ ಹಾಗೂ ವಕ್ಫ್ ತಿದ್ದುಪಡಿ ಮಸೂದೆಯ ಜಂಟಿ ಸಂಸದೀಯ ಸಮಿತಿಯ ಅಧ್ಯಕ್ಷ ಜಗದಾಂಬಿಕಾ ಪಾಲ್ ಅವರಿಗೆ ಪತ್ರ ಬರೆದಿದ್ದಾರೆ.
ಕೇಂದ್ರ ಸರ್ಕಾರದಲ್ಲಿ ವಕ್ಫ್ ತಿದ್ದುಪಡಿ ಮಸೂದೆ ತರಲು ಜಂಟಿ ಸಂಸದೀಯ ಸಮಿತಿ ರಚಿಸಿದ್ದು, ವಕ್ಫ್ ಆಸ್ತಿಗಳ ನಿರ್ವಹಣೆಯಲ್ಲಿ ದಕ್ಷತೆ ಹಾಗೂ ಪಾರದರ್ಶಕತೆ ತರಲು ಈ ಸಮಿತಿ ಶ್ರಮಿಸುತ್ತಿದೆ. ಆದರೆ ಕರ್ನಾಟಕದಲ್ಲಿ ರಾಜ್ಯ ಸರ್ಕಾರ ಮತ್ತು ವಕ್ಫ್ ಮಂಡಳಿಯು ಕಂದಾಯ ದಾಖಲೆಗಳನ್ನು ತಿದ್ದುವ ಹಾಗೂ ರೈತರ ಜಮೀನುಗಳ ಮಾಲೀಕತ್ವ ವರ್ಗಾಯಿಸಿಕೊಳ್ಳುವ ಪ್ರಯತ್ನ ಆರಂಭವಾಗಿದೆ. ಈ ರೀತಿ ತರಾತುರಿಯಲ್ಲಿ ಜಮೀನುಗಳನ್ನು ವಕ್ಫ್ ಮಂಡಳಿ ನೋಂದಾಯಿಸಿಕೊಳ್ಳುತ್ತಿರುವ ಪರಿಣಾಮ ಸಾವಿರಾರು ಬಡವರು ಹಾಗೂ ರೈತರು ವಂಶಪಾರಂಪರ್ಯವಾಗಿ ಬಂದ ಭೂಮಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಆರ್.ಅಶೋಕ ಪತ್ರದಲ್ಲಿ ವಿವರಿಸಿದ್ದಾರೆ.
ಇದು ಜನರಲ್ಲಿ ಆತಂಕ ಉಂಟುಮಾಡಿದ್ದು, ಹಾವೇರಿಯಲ್ಲಿ ಹಿಂಸಾಚಾರ, ಗಲಭೆ ಕೂಡ ನಡೆದಿದೆ. ಈ ಎಲ್ಲ ಘಟನೆಗಳ ಹಿನ್ನೆಲೆಯಲ್ಲಿ, ಜಂಟಿ ಸಮಿತಿಯು ಕೂಡಲೇ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜೊತೆ ಮಾತನಾಡಬೇಕು ಹಾಗೂ ವಕ್ಫ್ಗೆ ಸಂಬಂಧಿಸಿದ ಜಮೀನು ನೋಂದಣಿ ಸ್ಥಗಿತಗೊಳಿಸಲು ಸೂಚಿಸಬೇಕೆಂದು ಆರ್.ಅಶೋಕ ಮನವಿ ಮಾಡಿದ್ದಾರೆ.