ಬೆಂಗಳೂರು: ಪರಿಶಿಷ್ಟ ಜಾತಿ ಒಳಮೀಸಲಾತಿ ವರ್ಗೀಕರಣ ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ರಚಿಸಲಾಗಿರುವ ಏಕಸದಸ್ಯ ಆಯೋಗದ ಕಾರ್ಯಾವಧಿಯನ್ನು ಮೇ 31ರ ವರೆಗೆ ವಿಸ್ತರಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಒಳಮೀಸಲಾತಿಗೆ ಸಂಬಂಧಿಸಿದಂತೆ ನಿರ್ವಹಿಸುತ್ತಿರುವ ಕಾರ್ಯವು ಬಹಳ ಉನ್ನತಮಟ್ಟದ್ದಾಗಿದ್ದು, ಈ ಆಯೋಗದಲ್ಲಿ ಸ್ವೀಕೃತಗೊಂಡಿರುವ ದತ್ತಾಂಶಗಳಿಗೆ ಸಂಬಂಧಿಸಿದಂತೆ ವಿಶ್ಲೇಷಿಸಲು ಸಮಯಾವಕಾಶಬೇಕು ಎಂದು ವಿಷಯ ತಜ್ಞರು ಕೋರಿರುವ ಹಿನ್ನೆಲೆಯಲ್ಲಿ ಮೇ 31ರ ವರೆಗೆ ವಿಸ್ತರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ನ್ಯಾ.ಎಚ್.ಎನ್.ನಾಗಮೋಹನ್ ದಾಸ್ ಅವರ ಏಕಸದಸ್ಯ ವಿಚಾರಣಾ ಆಯೋಗವು ಮಾ.27ರಂದು ಸರಕಾರಕ್ಕೆ ಮಧ್ಯಂತರ ವರದಿಯನ್ನು ಸಲ್ಲಿಸಿತ್ತು. ಈ ವರದಿಯ ಶಿಫಾರಸುಗಳನ್ನು ಗಮನಿಸಿರುವ ಸರಕಾರ, ಆಯೋಗಕ್ಕೆ ಹೆಚ್ಚಿನ ಕಾಲಾವಕಾಶದ ಅವಶ್ಯಕತೆ ಇದೆಯೆಂದು ನಿರ್ಧರಿಸಿ ಕಾಲಾವಧಿಯನ್ನು ವಿಸ್ತರಣೆ ಮಾಡಿರುವುದಾಗಿ ಆದೇಶದಲ್ಲಿ ಉಲ್ಲೇಖಿಸಿದೆ.