ಬೆಂಗಳೂರು: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ವಿಜಯಪುರ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಟೀಕಾ ಪ್ರಹಾರ ಮುಂದುವರಿಸಿದ್ದು, ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ ಹಾಗೂ ಧೃತರಾಷ್ಟ್ರರಲ್ಲ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, ಸಂಕಲ್ಪ ಪತ್ರ, ಬಂಧುಗಳೇ, ಎಲ್ಲರಿಗೂ ಯುಗಾದಿ ಹಬ್ಬದ ಶುಭಾಶಯಗಳು. ಶ್ರೀ ವಿಶ್ವಾವಸು ಸಂವತ್ಸರವು ನಿಮಗೆಲ್ಲರಿಗೂ ಸುಖ, ಶಾಂತಿ, ನೆಮ್ಮದಿ ನೀಡಲಿ. ರೈತರಿಗೆ, ಶ್ರಮಿಕರಿಗೆ ಈ ಸಂವತ್ಸರವು ಫಲಪ್ರದಾಯಕವಾಗಲಿ. ಜನಸೇವೆ ಮಾಡದೆ, ಪ್ರಜೆಗಳ ಕಷ್ಟ ಕಾರ್ಪಣ್ಯಕ್ಕೆ ಧ್ವನಿಯಾಗದೆ, ತಮ್ಮ ರಾಜಕೀಯ ಅಭ್ಯುದಯಕ್ಕೆ ಹೊಂದಾಣಿಕೆ ರಾಜಕಾರಣ ಮಾಡುವವರ ವಿರುದ್ದ ನನ್ನ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದ್ದಾರೆ.
ಮಹಾಭಾರತದಲ್ಲಿ ಜಯಗಳಿಸಿದ್ದು ಕೃಷ್ಣಾರ್ಜುನರೇ ಹೊರತು ಶಕುನಿ-ಧೃತರಾಷ್ಟ್ರರಲ್ಲ. ರಾಜ್ಯದಲ್ಲಿ ಹೊಂದಾಣಿಕೆ ರಾಜಕಾರಣದ ವಿರುದ್ಧ ನಮ್ಮೆಲ್ಲರ ಹೋರಾಟ ಆರಂಭವಾಗಲಿದೆ. ಅಲ್ಲದೆ ರಾಮ ರಾಜ್ಯ ಸ್ಥಾಪನೆ, ಉತ್ತರ ಕರ್ನಾಟಕದ ಅಭಿವೃದ್ಧಿ, ನೀರಾವರಿ, ಗೋ ರಕ್ಷಣೆ, ಕನ್ನಡ ಮಾಧ್ಯಮ ಪರೀಕ್ಷಾರ್ಥಿಗಳಿಗೆ ಆಗುತ್ತಿರುವ ಅನ್ಯಾಯ, ಬಾಣಂತಿಯರ ಸಾವು, ಲವ್ ಜಿಹಾದ್, ವಕ್ಸ್ ವಿರುದ್ದ ನನ್ನ ಹೋರಾಟವನ್ನು ತೀಕ್ಷ್ಯಗೊಳಿಸಿ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ಪ್ರಯತ್ನ ಮಾಡುತ್ತೇನೆ ಎಂದಿದ್ದಾರೆ.
ಜಾಲತಾಣದ ಮೂಲಕ ತಮ್ಮ ಶುಭ ಹಾರೈಕೆಗಳನ್ನು ಬೆಂಬಲ, ಪ್ರೋತ್ಸಾಹವನ್ನು ತೋರಿಸುತ್ತಿರುವ ಎಲ್ಲಾ ಸಹೃದಯಿ ಸ್ನೇಹಿತರಿಗೂ, ಅಭಿಮಾನಿಗಳಿಗೂ, ಹಿತೈಷಿಗಳಿಗೂ ಹಾಗೂ ಕರೆ ಮಾಡಿ ಬೆಂಬಲ, ಮನೋಸ್ಥೆರ್ಯ ನೀಡಿರುವ ಎಲ್ಲರಿಗೂ ಧನ್ಯವಾದಗಳು. ಭಾರತ ಮಾತೆಗೆ ಜಯವಾಗಲಿ ಎಂದು ಹೇಳಿದ್ದಾರೆ. ಮುಂದಿನ ಹೋರಾಟದ ಬಗ್ಗೆ ಅಸಂಕಲ್ಪ ಪತ್ರ ಹೆಸರಿನಲ್ಲಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪೋಸ್ಟ್ ಹಾಕಿದ್ದಾರೆ. ತಮ್ಮನ್ನು ಬೆಂಬಲಿಸಿದವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.