ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ರಾಜಿಯೋಗ್ಯ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜುಲೈ 8ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರಗಳ ಕೇಂದ್ರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ನ್ಯಾಯಾಧೀಶರು ಚಾಮರಾಜನಗರ ಜಿಲ್ಲಾ ನ್ಯಾಯಾಲಯ ಹಾಗೂ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ತಾಲೂಕಿನ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್ ನಡೆಯಲಿದೆ ಎಂದರು. ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಕಾರ್ಮಿಕ ವಿವಾದಗಳು, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿಗೆ ಸಂಬಂಧಿಸಿದ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳಿಗೆ ಸಂಬಂಧಿಸಿದ ಪ್ರಕರಣಗಳು, ರಾಜಿಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣ (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ)ಗಳನ್ನು ಲೋಕ್ ಅದಾಲತ್ ನಲ್ಲಿ ಇತ್ಯರ್ಥಪಡಿಸಲಾಗುತ್ತದೆ ಎಂದು ತಿಳಿಸಿದರು. ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಲೋಕ್ ಅದಾಲತ್ನಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜಿಯೋಗ್ಯ ಪ್ರಕರಣಗಳನ್ನು ಶೀಘ್ರ ಹಾಗೂ ಪರಿಣಾಮಕಾರಿ ತೀರ್ಮಾನಕ್ಕಾಗಿ ಚಾಮರಾಜನಗರ ಜಿಲ್ಲಾ ಕೇಂದ್ರ ನ್ಯಾಯಾಲಯಗಳಲ್ಲಿ, ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸಂಧಾನಕಾರರ ಮೂಲಕ ಸೂಕ್ತ ಮಾರ್ಗದರ್ಶನ ನೀಡುವ ಪ್ರತಿದಿನ ಪೂರ್ವಭಾವಿ ಸಮಾಲೋಚನೆಗಳು ಭೌತಿಕ /ವಿ.ಸಿ. ಮೂಲಕ ನಡೆಯುತ್ತಿದೆ. ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಆನ್ಲೈನ್, ವಿಡಿಯೋ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸ್ ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿ ಎಂದರು. ಜುಲೈ 8 ರಂದು ನಡೆಯುವ ಮೆಗಾ ಲೋಕ ಅದಾಲತ್ ನಲ್ಲಿ ಸಂಬಂಧಿತ ವಕೀಲರು, ಕಕ್ಷಿದಾರರು ತಮ್ಮ ಸಹಕಾರವನ್ನು ನೀಡಿದಲ್ಲಿ ಸಂಧಾನಕಾರರು ನೀಡುವ ಸಲಹೆಗಳನ್ನು ಆಲಿಸಿ, ಪರಸ್ಪರ ಒಪ್ಪಿಗೆಯಾದಲ್ಲಿ ಪ್ರಕರಣವನ್ನು ಬಗೆಹರಿಸಿಕೊಳ್ಳಬಹುದು. ಇದರಿಂದ ಕಕ್ಷಿದಾರರ ಸಮಯ ಮತ್ತು ಹಣ ಉಳಿತಾಯವಾಗಿ ಪಕ್ಷಕಾರರ ನಡುವೆ ಬಾಂಧವ್ಯ ನೆಲೆಸುವಂತಾಗುತ್ತದೆ ಎಂದು ತಿಳಿಸಿದರು. ಕಳೆದ ಫೆಬ್ರವರಿ 11ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್ ನಲ್ಲಿ ಒಟ್ಟು 11,975 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಈ ಪೈಕಿ 1621 ನ್ಯಾಯಾಲಯದ ಪ್ರಕರಣಗಳಾಗಿದ್ದು, 10354 ವ್ಯಾಜ್ಯ ಪೂರ್ವ ಪ್ರಕರಣಗಳಾಗಿವೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಬಿ.ಎಸ್. ಭಾರತಿ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರಾದ ಎಂ. ಶ್ರೀಧರ ಅವರು ಮಾತನಾಡಿ ಲೋಕ್ ಅದಾಲತ್ ನಲ್ಲಿ ಹೆಚ್ಚೆಚ್ಚು ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸುವ ಸಲುವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ವಿಮಾ ಕಂಪನಿಗಳು, ಭೂ ಸ್ವಾಧೀನಾಧಿಕಾರಿಗಳು, ಬ್ಯಾಂಕ್ಗಳು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಪೆÇಲೀಸ್ ಇಲಾಖೆ, ವಕೀಲರು, ಕಂದಾಯ ಇಲಾಖೆ, ಅಬಕಾರಿ ಇಲಾಖೆ ಅಧಿಕಾರಿಗಳೊಂದಿಗೆ ಈಗಾಗಲೇ ಪೂರ್ವಭಾವಿ ಸಭೆ ನಡೆಸಲಾಗಿದೆ. ಜುಲೈ 8ರಂದು ನಡೆಯುವ ಲೋಕ್ ಅದಾಲತ್ ನಲ್ಲಿ 13 ಸಾವಿರ ಪ್ರಕರಣಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಇಂದುಶೇಖರ್ ಅವರು ಮಾತನಾಡಿ ಬೃಹತ್ ಲೋಕ್ ಅದಾಲತ್ ನಲ್ಲಿ ರಾಜಿಯಾಗಬಲ್ಲ ಕ್ರಿಮಿನಲ್ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಇತರೆ ರಾಜಿಯೋಗ್ಯ ಪ್ರಕರಣಗಳನ್ನು ಬಗೆಹರಿಸಲಾಗುತ್ತದೆ. ಕಕ್ಷಿದಾರರು ಈ ಲೋಕ್ ಅದಾಲತ್ ನ ಸದುಪಯೋಗ ಮಾಡಿಕೊಳ್ಳಬೇಕೆಂದು ತಿಳಿಸಿದರು.