ವರದಿ : ವಿನಯ್ ದೊಡ್ಡಕೊಪ್ಪಲು
ಕೆ.ಆರ್.ನಗರ: ಕೆ.ಆರ್.ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಬಸವೇಶ್ವರ ಬಡಾವಣೆಯ ಹಿರಿಯ ಕಾಂಗ್ರೆಸ್ ಮುಖಂಡ ಕೆ.ಎಸ್. ಮಹೇಶ್ ಅಧಿಕಾರ ಸ್ವೀಕರಿಸಿದರು.
ಪಟ್ಟಣದ 7ನೇ ರಸ್ತೆಯಲ್ಲಿರುವ ನಗರ ಯೋಜನ ಪ್ರಾಧಿಕಾರದ ಕಚೇರಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಿರ್ದೇಶಕರಾಗಿ ಸೈಯದ್ ಜಾಬೀರ್, ಸರಿತಾ ಜವರಪ್ಪ ಮತ್ತು ಕೆ.ಎನ್. ಪ್ರಸನ್ನ ಕುಮಾರ್ ಅವರು ಅಧ್ಯಕ್ಷರೊಂದಿಗೆ ಅಧಿಕಾರ ಸ್ವೀಕಾರ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಕೆ. ಎಸ್. ಮಹೇಶ್ ಪಕ್ಷದ ವರಿಷ್ಠರು ನನಗೆ ನೀಡಿರುವ ಅಧಿಕಾರವನ್ನು ಸದ್ಬಳಕೆ ಮಾಡಿಕೊಂಡು ಪಟ್ಟಣದ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಕೆಲಸ ಮಾಡುವುದಾಗಿ ತಿಳಿಸಿದರು.
ನಗರ ಯೋಜನಾ ಪ್ರಾಧಿಕಾರದ ಅಧಿಕಾರದ ವ್ಯಾಪ್ತಿಗೆ ಬರುವ ಕೆಲಸಗಳನ್ನು ಸರ್ಕಾರದ ನಿಯಮಾನುಸಾರ ಮಾಡಿ ಶಾಸಕ ಡಿ. ರವಿಶಂಕರ್ ಅವರ ಮಾರ್ಗದರ್ಶನದಲ್ಲಿ ಪಟ್ಟಣದ ಸಮಗ್ರ ಏಳಿಗೆಗೆ ದುಡಿಯುವುದಾಗಿ ನುಡಿದರು.
ನಗರ ಯೋಜನಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನಯನ ನಾಯಕ್, ಮಾಜಿ ಅಧ್ಯಕ್ಷ ವೈ.ಎಸ್. ಕುಮಾರ್, ಸಾಲಿಗ್ರಾಮ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ರಾಣಿ ಬಾಲಚಂದ್ರ, ಕೆ. ಆರ್. ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಲತಾ , ಸರ್ಕಾರಿ ಮಹಿಳಾ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಸುನೀತಾ ರಮೇಶ್ , ಮತ್ತಿತರರು ನೂತನ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ಅಭಿನಂದಿಸಿದರು.