2022-23ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ ಆಗಿದೆ. ನಾಡಿನ ವಿವಿಧ ಕ್ಷೇತ್ರಗಳ ಅನೇಕ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಈ ಬಾರಿ ಚಲನಚಿತ್ರ ಕ್ಷೇತ್ರದಿಂದ ಅನುಭವಿ ಕಲಾವಿದರಾದ ಬ್ಯಾಂಕ್ ಜನಾರ್ದನ್ ಮತ್ತು ಡಿಂಗ್ರಿ ನಾಗರಾಜ್ ಅವರಿಗೆ ಪ್ರಶಸ್ತಿ ಘೋಷಣೆ ಆಗಿದೆ. ಕನ್ನಡ ಚಿತ್ರರಂಗದಲ್ಲಿ ಹಲವು ವರ್ಷಗಳಿಂದ ಈ ಕಲಾವಿದರು ಸಕ್ರಿಯರಾಗಿದ್ದಾರೆ. ನೂರಾರು ಸಿನಿಮಾಗಳ ಮೂಲಕ ಜನರನ್ನು ರಂಜಿಸಿದ್ದಾರೆ. ಮತ್ತು ಬ್ಯಾಂಕ್ ಜನಾರ್ದನ್ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಆಗಿರುವುದಕ್ಕೆ ಅವರ ಅಭಿಮಾನಿಗಳಿಗೆ ಸಂತಸ ಆಗಿದೆ. ಚಿತ್ರರಂಗದವರು, ಆಪ್ತರು, ಅಭಿಮಾನಿಗಳು ಈ ಕಲಾವಿದರಿಗೆ ಅಭಿನಂದನೆ ಸಲ್ಲಿಸುತ್ತಿದ್ದಾರೆ.
ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರವು ಇಂದು (ಅಕ್ಟೋಬರ್ 31) ಮಧ್ಯಾಹ್ನ ಬಿಡುಗಡೆ ಮಾಡಿದೆ. ಸಂಘ-ಸಂಸ್ಥೆಗಳು ಮತ್ತು ವೈಯಕ್ತಿಕವಾಗಿ ಒಟ್ಟು 68 ರಾಜ್ಯೋತ್ಸವ ಪ್ರಶಸ್ತಿಯನ್ನು ಈ ಬಾರಿ ನೀಡಲಾಗುತ್ತಿದೆ. ಸಂಗೀತ, ಸಿನಿಮಾ, ಕ್ರೀಡೆ, ನ್ಯಾಯಾಂಗ, ರಂಗಭೂಮಿ, ಶಿಕ್ಷಣ, ಪರಿಸರ, ಮಾಧ್ಯಮ, ತಂತ್ರಜ್ಞಾನ ಸೇರಿದಂತೆ ಹಲವು ವಿಭಾಗಗಳಲ್ಲಿ ಪ್ರಶಸ್ತಿಗೆ ಅನೇಕರು ಭಾಜನರಾಗಿದ್ದಾರೆ.