ಚನ್ನಪಟ್ಟಣ : ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಮ್ಮ ಕ್ಷೇತ್ರ ವ್ಯಾಪ್ತಿಯ ಕೆ.ಶೆಟ್ಟಹಳ್ಳಿಯಲ್ಲಿ ವಿವಿಧ ವಿಷಯಗಳ ಕುರಿತು ಮಹತ್ವದ ಹೇಳಿಕೆ ನೀಡಿದ್ದು, ಬೆಂಗಳೂರು-ಮೈಸೂರು ರೈಲ್ವೆಮಾರ್ಗದ ಸಮಸ್ಯೆಗಳಿಗೆ ಆದಷ್ಟು ಬೇಗ ಪರಿಹಾರ ನೀಡುವುದಾಗಿ ತಿಳಿಸಿದರು.
ಈ ಬಗ್ಗೆ ಮಾತನಾಡಿದ ಅವರು, ಇಂದು ರೈಲ್ವೆ ಮಾರ್ಗದ ಪರಿಶೀಲನೆ ನಡೆಸಲಾಗುತ್ತಿದೆ. ಅನೇಕ ಕಡೆಗಳಲ್ಲಿ ಲೆವೆಲ್ ಕ್ರಾಸಿಂಗ್ ಹಾಗೂ ಮೇಲ್ಸೇತುವೆಗಳ ಸಮಸ್ಯೆ ಇರುವುದು ಗಮನಕ್ಕೆ ಬಂದಿದ್ದು, ಈ ನಿಟ್ಟಿನಲ್ಲಿ ಕೇಂದ್ರ ರೈಲ್ವೆ ಸಚಿವರ ಜೊತೆಗೂಡಿ ಸ್ವತಃ ಪ್ರಯಾಣ ಬೆಳೆಸಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇವೆ. ಜನರಿಗೆ ಅನುಕೂಲವಾಗುವಂತೆ ಇರುವ ಎಲ್ಲಾ ಅಡೆತಡೆಗಳನ್ನು ಶೀಘ್ರದಲ್ಲೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು.
ಇನ್ನು ರಾಜ್ಯದ ಕುತೂಹಲ ಕೆರಳಿಸಿರುವ ಉಪಚುನಾವಣೆಗಳ ಬಗ್ಗೆ ಮಾತನಾಡಿ, ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗೆ ಇಂದು ಮತದಾನ ನಡೆಯುತ್ತಿದೆ. ಎರಡೂ ಪಕ್ಷಗಳ ನಡುವೆ ತೀವ್ರ ಪೈಪೋಟಿ ಇದ್ದರೂ ಸಹ, ಅಂತಿಮವಾಗಿ ನಮ್ಮ ಮೈತ್ರಿ ಅಭ್ಯರ್ಥಿಗಳೇ ಗೆಲುವು ಸಾಧಿಸುತ್ತಾರೆ ಎಂಬ ಪೂರ್ಣ ವಿಶ್ವಾಸ ನನಗಿದೆ ಎಂದರು.
ಇದೇ ವೇಳೆ ಬಿಜೆಪಿ ಮತ್ತು ಆರ್.ಎಸ್.ಎಸ್ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ನೀಡಿದ್ದು, ಖರ್ಗೆ ಹಿರಿಯ ಮತ್ತು ಅನುಭವಿ ರಾಜಕಾರಣಿಗಳು, ಅವರು ಇಂತಹ ಹೇಳಿಕೆಗಳನ್ನು ನೀಡುವ ಮುನ್ನ ಆತ್ಮವಿಮರ್ಶೆ ಮಾಡಿಕೊಳ್ಳಬೇಕು. ಇಂತಹ ಕೆಟ್ಟ ಪದಬಳಕೆಗಳ ವಿರುದ್ಧ ಇದೇ ಕಾಂಗ್ರೆಸ್ ಸರ್ಕಾರ ಕಾನೂನು ತಂದಿದೆ. ಈಗ ತಮ್ಮದೇ ನಾಯಕರ ಹೇಳಿಕೆಯ ವಿರುದ್ಧ ಈ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ ಎಂಬುದನ್ನು ನಾವೂ ನೋಡುತ್ತೇವೆ ಎಂದು ಟೀಕಿಸಿದರು.



