ದಾವಣಗೆರೆ : ಉತ್ತಮ ಸಮಾಜಕ್ಕಾಗಿ, ಸದೃಢ ದೇಶಕ್ಕಾಗಿ ನಾವೆಲ್ಲರೂ ಜಾಗೃತಿ ವಹಿಸಿ ತಂಬಾಕು ಮುಕ್ತರಾಗೋಣ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿ ಮಹಾವೀರ ಎಂ. ಕರೆಣ್ಣವರ ಹೇಳಿದರು.
ಇಂದು ಸೋಮವಾರ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇವರ ಸಹಯೋಗದಲ್ಲಿ ನಗರದ ಗಾಂಧಿ ಭವನದಲ್ಲಿ ಆಯೋಜಿಸಲಾಗಿದ್ದ ತಂಬಾಕು ಮುಕ್ತ ಯುವ ಅಭಿಯಾನದ ಅಂಗವಾಗಿ ತಂಬಾಕಿನಿಂದ ಉಂಟಾಗುವ ದುಷ್ಪರಿಣಾಮಗಳು ಗ್ರಾಮ ಮಟ್ಟದಲ್ಲಿ ಹಾಗೂ ಆರೋಗ್ಯ ಮಂದಿರದ ವ್ಯಾಪ್ತಿಯಲ್ಲಿ ತಂಬಾಕು ವ್ಯಸನಿಗಳನ್ನು ಗುರುತಿಸಿ ಆಪ್ತ ಸಮಾಲೋಚನೆ ಕುರಿತು ಸಮುದಾಯ ಆರೋಗ್ಯಾಧಿಕಾರಿಗಳಿಗೆ ಒಂದು ದಿನದ ತರಬೇತಿ ಕಾರ್ಯಗಾರವನ್ನು ಉದ್ಘಾಟಿಸಿ ಮಾತಾನಾಡಿ ಅವರು ಜನರಲ್ಲಿರುವ ತಪ್ಪು ಕಲ್ಪನೆಗಳಿಂದ ತಂಬಾಕಿನಂತಹ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಇಂದಿನ ಯುವಕರು, ಕೆಟ್ಟ ಸ್ನೇಹಿತರ ಸಹವಾಸದಿಂದ ದುಶ್ಚಟಕ್ಕೆ ಬಿದ್ದು ಇನ್ನಿತರ ದುರಭ್ಯಾಸಗಳಿಗೆ ಒಳಗಾಗಿ ತಮ್ಮ ಬದುಕನ್ನೆ ನಾಶ ಪಡಿಸಿಕೊಳ್ಳುತ್ತಿದ್ದಾರೆ ಎಂದರು.
ಕೋಟ್ಪಾ-2003 ರ ಕಾಯ್ದೆಯ ಮತ್ತು ‘ತಂಬಾಕು ಮುಕ್ತ ಯುವ ಅಭಿಯಾನ 2.0’ ಮಾರ್ಗದರ್ಶನದ ಅನುಸಾರ ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮ ಮಾಡುವ ನಿಟ್ಟಿನಲ್ಲಿ ಸಮುದಾಯ ಆರೋಗ್ಯ ಅಧಿಕಾರಿಗಳ ಪಾತ್ರ ಮಹತ್ವನೀಯವಾಗಿದ್ದು ಎಲ್ಲರೂ ಸಹಕರಿಸುವಂತೆ ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಲೋಕೇಶ್ ಪಿ.ಎನ್, ಮಾತನಾಡಿ ನಮ್ಮ ದೇಶ ಹಳ್ಳಿಗಳ ದೇಶವಾಗಿರುವುದರಿಂದ ಗ್ರಾಮೀಣ ಜನತೆಯಲ್ಲಿ ಇದರ ಬಗ್ಗೆ ಮಾಹಿತಿ ಇಲ್ಲದಿರುವುದರಿಂದ ನಮ್ಮ ಪೆÇೀಷಕರು ತಮ್ಮ ಮಕ್ಕಳ ಮೂಲಕ ತಂಬಾಕು ಉತ್ಪನ್ನಗಳನ್ನು ಖರೀದಿಸುವುದರಿಂದ ಇಂದಿನ ಮಕ್ಕಳೇ ದುಶ್ಚಟಗಳಿಗೆ ಬಲಿಯಾಗುತ್ತಿರುವುದರಿಂದ ಹಾಗೂ ನಮಗೆ ಗೊತ್ತಿಲ್ಲದೇ ಹದಿ-ಹರೆಯದ ವಯಸ್ಸಿನ 293 ಮಕ್ಕಳು ಪ್ರತಿ ದಿನ ಹೊಸದಾಗಿ ತಂಬಾಕು ಸೇವಿಸಲು ಪ್ರಾರಂಭಿಸುತ್ತಿರುವುದು ಹಾಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಯುವಕರಿಗೆ, ಸಮುದಾಯದವರಿಗೆ ಜಾಗೃತಿ ಕಾರ್ಯಕ್ರಮಗಳು ತಮ್ಮಿಂದ ಆಗಬೇಕಾಗಿದೆ ಎಂದು ಕರೆನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಷಣ್ಮುಖಪ್ಪ ಎಸ್, ಬಾಪೂಜಿ ದಂತ ಮಹಾವಿದ್ಯಾಲಯದ ಪ್ರಾಧ್ಯಾಪಕರಾದ ಡಾ. ಶುಭ.ಸಿ, ಜಿ.ವಿ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ, ಸತೀಶ್ ಕಲಹಾಳ್, ಸಮಾಜ ಕಾರ್ಯಕರ್ತರಾದ ಶೈಲಾ ಶಾಮನೂರ, ಜಿಲ್ಲೆಯ ಸಮುದಾಯ ಆರೋಗ್ಯಾಧಿಕಾರಿಗಳು ಭಾಗವಹಿಸಿದ್ದರು.