ಚಿಕ್ಕಬಳ್ಳಾಪುರ: ಲೋಕಸಭೆ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಏಪ್ರಿಲ್ 25 ಮತ್ತು 26ರಂದು ಪ್ರಸಿದ್ಧ ಪ್ರವಾಸಿ ತಾಣ ನಂದಿ ಗಿರಿಧಾಮ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
25ರ ಸಂಜೆ 6ರಿಂದ 26ರ ರಾತ್ರಿ 8ರ ವರೆಗೂ ನಿರ್ಬಂಧ ಇರಲಿದೆ. ಈ ದಿನಗಳಲ್ಲಿ ನಂದಿ ಗಿರಿಧಾಮದಲ್ಲಿರುವ ಅತಿಥಿ ಗೃಹಗಳಿಗೂ ಬೀಗ ಹಾಕಲಾಗುವುದು ಎಂದು ಚಿಕ್ಕಬಳ್ಳಾಪುರ ಡಿಸಿ ಆದೇಶ ತಿಳಿಸಿದೆ.
ಲೋಕಸಭೆ ಚುನಾವಣೆಯ 2ನೇ ಹಂತದಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣದ ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ರಾಜ್ಯದಲ್ಲಿ 14 ಕ್ಷೇತ್ರಗಳಿಗೆ ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ.
ಏಪ್ರಿಲ್ 26 ಶುಕ್ರವಾರ ಬರುತ್ತದೆ. ಲೋಕಸಭೆ ಚುನಾವಣೆ ಪ್ರಯುಕ್ತ ಅಂದು ಸರ್ಕಾರಿ ರಜೆ ಘೋಷಿಸಲಾಗಿದೆ. ಖಾಸಗಿ ಕಂಪನಿಗಳೂ ಸಹ ರಜೆ ನೀಡುವುದು ಕಡ್ಡಾಯ ಎಂದು ಚುನಾವಣಾ ಆಯೋಗ ಈಗಾಗಲೇ ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಆದರೆ, ಮತದಾನದ ದಿನ ಶುಕ್ರವಾರ ಬರುತ್ತದೆ. ಮರುದಿನ ಶನಿವಾರ ಹಾಗೂ ಅದರ ಮರುದಿನ ಭಾನುವಾರ ಆದ್ದರಿಂದ ಸತತ ಮೂರು ದಿನ ರಜೆ ಎಂದು ಜನ ಪ್ರವಾಸಕ್ಕೆ ಯೋಜನೆ ಮಾಡಿದರೆ ಮತದಾನದ ಪ್ರಮಾಣ ಕಡಿಮೆಯಾಗಲಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಚಿಕ್ಕಬಳ್ಳಾಪುರ ಡಿಸಿ ನಂದಿ ಗಿರಿಧಾಮಕ್ಕೆ ಪ್ರವೇಶ ನಿರ್ಬಂಧಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಏಪ್ರಿಲ್ 25 ಮತ್ತು 26 ರಂದು ಹೋಂ ಸ್ಟೇ, ರೇಸಾರ್ಟ್ ಬುಕಿಂಗ್ಗೆ ಅವಕಾಶ ನೀಡದಂತೆ ಚಿಕ್ಕಮಗಳೂರು ಜಿಲ್ಲೆಯ ಹೋಂ ಸ್ಟೇ, ರೇಸಾರ್ಟ್ ಮಾಲೀಕರಿಗೆ ಜಿಲ್ಲಾಡಳಿತ ಸೂಚನೆ ನೀಡಿತ್ತು. ಜನರು ಪ್ರವಾಸ ಬರುವುದನ್ನು ತಪ್ಪಿಸಲು ಮತ್ತು ಮತದಾನದ ಪ್ರಮಾಣ ಹೆಚ್ಚಿಸುವ ಸಲುವಾಗಿಯೇ ಈ ಕ್ರಮವನ್ನು ಕೈಗೊಳ್ಳಲಾಗಿದೆ.