ಬೆಂಗಳೂರು: ರಾಜ್ಯದ ವಿವಿಧೆಡೆ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಶಂಕೆಯ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಗುರುವಾರ ಬೆಳಗ್ಗೆ ಏಳು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಬೆಂಗಳೂರು (12 ಸ್ಥಳ), ಬೆಂಗಳೂರು ಗ್ರಾಮಾಂತರ (8), ತುಮಕೂರು (7), ಯಾದಗಿರಿ (5), ಮಂಗಳೂರು (4) ಮತ್ತು ವಿಜಯಪುರ (4) ಸೇರಿ ಒಟ್ಟು 40ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಖಲೆ ಪರಿಶೀಲನೆ ನಡೆದಿದೆ.
ತುಮಕೂರಿನ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ರಾಜಶೇಖರ್, ದಕ್ಷಿಣ ಕನ್ನಡ ಜಿಲ್ಲೆಯ ಸರ್ವೇ ಮೇಲ್ವಿಚಾರಕ ಮಂಜುನಾಥ್, ವಿಜಯಪುರದ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ರೇಣುಕಾ, ಬೆಂಗಳೂರು ನಗರದ ನಗರ ಮತ್ತು ಗ್ರಾಮೀಣ ಯೋಜನಾ ನಿರ್ದೇಶನಾಲಯದ ಹೆಚ್ಚುವರಿ ನಿರ್ದೇಶಕ ಮುರಳಿ ಟಿ.ವಿ., ಕಾನೂನು ಮಾಪನಶಾಸ್ತ್ರದ ಇನ್ ಸ್ಪೆಕ್ಟರ್ ಎಚ್. ಆರ್. ನಟರಾಜ್, ಬೆಂಗಳೂರು ಗ್ರಾಮಾಂತರದ ಹೊಸಕೋಟೆ ತಾಲೂಕು ಕಚೇರಿಯ ಎಸ್.ಡಿ.ಎ. ಅನಂತ್ ಕುಮಾರ್ ಹಾಗೂ ಯಾದಗಿರಿಯ ಶಹಾಪುರ ತಾಲೂಕಿನ ಉಮಾಕಾಂತ ಎಂಬವರ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾಳಿ ವೇಳೆ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.