ಚಿಂತಾಮಣಿ: ತಾಲ್ಲೂಕಿನ ಸಂತೇಕಲ್ಲಹಳ್ಳಿ ಗೇಟ್ ಬಳಿ ದ್ವಿಚಕ್ರ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹದಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಾಲ್ಲೂಕಿನ ಕನಿಶೆಟ್ಟಿಹಳ್ಳಿ ಗ್ರಾಮದ ಭವನ್ ಕುಮಾರ್(೨೭), ಭಾನುಪ್ರಕಾಶ್(೨೩) ಮೃತಪಟ್ಟ ಯುವಕರು. ಭವನ್ ಕುಮಾರ್ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕೆಲಸ ಮಾಡುತ್ತಿದ್ದನು. ಭಾನುಪ್ರಕಾಶ್ ಚೊಕ್ಕಹಳ್ಳಿ ಗೇಟ್ನ ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು.
ಕನಿಶೆಟ್ಟಿಹಳ್ಳಿ ಗ್ರಾಮದಲ್ಲಿ ಸ್ನೇಹಿತನೊಬ್ಬನ ಹುಟ್ಟುಹಬ್ಬ ಸಮಾರಂಭಕ್ಕೆ ಇಬ್ಬರು ಸ್ನೇಹಿತರು ಒಟ್ಟಿಗೆ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನಿಂದ ತಮ್ಮ ಗ್ರಾಮಕ್ಕೆ ಬರುತ್ತಿದ್ದರು. ಸಂತೇಕಲ್ಲಹಳ್ಳಿ ಗೇಟ್ ಸಮೀಪದಲ್ಲಿ ಚಿಂತಾಮಣಿಯಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟಿದ್ದಾರೆ. ಸ್ನೇಹಿತನೊಬ್ಬನ ಹುಟ್ಟು ಹಬ್ಬದಲ್ಲಿ ಭಾಗವಹಿಸಲು ಬರುತ್ತಿದ್ದ ಇಬ್ಬರು ಯುವಕರು ಮತ್ತೆ ಬಾರದ ಲೋಕಕ್ಕೆ ಹೋದರು ಎಂದು ಕುಟುಂಬದವರು ಗೋಳು, ಅಕ್ರಂದನ ಮುಗಿಲು ಮುಟ್ಟಿತ್ತು.
ಡಿವೈಎಸ್ಪಿ ಮುರಳೀಧರ್, ಗ್ರಾಮಾಂತರ ಠಾಣೆಯ ಇನ್ಸ್ ಸ್ಪೆಕ್ಟರ್ ಶಿವರಾಜ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಗರದ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿದ್ದಾರೆ.