ಮಂಗಳೂರು (ದಕ್ಷಿಣ ಕನ್ನಡ): ಕಟ್ಟಡ ಕಲ್ಲು ತೆಗೆಯಲು ಅನುಮತಿ ನೀಡಲು ಲಂಚ ಸ್ವೀಕರಿಸುತ್ತಿದ್ದ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಮತ್ತು ಸಿಬ್ಬಂಧಿಗಳನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.
ಪಿರ್ಯಾದಿದಾರರ ಹೆಸರಿಗೆ ಜಿ.ಪಿ.ಎ ಆಗಿರುವ ತಮ್ಮ ಪರಿಚಯದವರ ಹೆಸರಿನಲ್ಲಿ ಇರುವ ಉಳ್ಳಾಲ ತಾಲೂಕು ಇರಾ ಗ್ರಾಮದ ಸರ್ವೆ ನಂಬ್ರ 279/5 ರಲ್ಲಿ 1.39 ಎಕರೆ ವಿಸ್ತೀರ್ಣದ ಜಮೀನಿನ ಪೈಕಿ 0.35 ಎಕರೆ ಪ್ರದೇಶದಲ್ಲಿ ಮನೆಯನ್ನು ಕಟ್ಟುವ ಉದ್ದೇಶದಿಂದ ಕಟ್ಟಡಕಲ್ಲು ತೆಗೆದು ಸಮತಟ್ಟು ಮಾಡಲು ಅನುಮತಿ ನೀಡಲು ಮಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ 2024ರ ಅಕ್ಟೋಬರ್ 28ರಂದು ಅರ್ಜಿಯನ್ನು ಸಲ್ಲಿಸಿರುತ್ತಾರೆ.
ಉಳ್ಳಾಲ ತಾಲೂಕು ತಹಶೀಲ್ದಾರ್ ರವರು ಸಮತಟ್ಟು ಮಾಡುವ ಸಲುವಾಗಿ ಜಮೀನಿನಲ್ಲಿ ಲಭ್ಯವಿರುವ ಕಟ್ಟಡಕಲ್ಲು ತೆಗೆಯಲು ಪ್ರಮಾಣಪತ್ರ/ದೃಢಿಕರಣ ಪತ್ರ ನೀಡಬಹುದಾಗಿದೆ ಎಂಬುದಾಗಿ ಮಾರ್ಚ್ 21 ರಂದು ವರದಿ ಸಲ್ಲಿಸಿದ್ದರೂ ಕೂಡ ಗಣಿ ಇಲಾಖೆಯಿಂದ ಅನುಮತಿ ನೀಡಿರುವುದಿಲ್ಲ.ಈ ಬಗ್ಗೆ ಅರ್ಜಿಯ ಬಗ್ಗೆ ವಿಚಾರಿಸಲು ಪಿರ್ಯಾದಿದಾರರು ಮಂಗಳೂರು ಗಣಿ ಇಲಾಖೆ ಕಛೇರಿಗೆ ತೆರಳಿದ್ದು, ಅಲ್ಲಿನ ಉಪನಿರ್ದೇಶಕರಾದ ಕೃಷ್ಣವೇಣಿ, ಸಿಬ್ಬಂದಿ ಪ್ರದೀಪ್ ಎಂಬವರನ್ನು ಕರೆಯಿಸಿ ಫೈಲಿಗೆ 50,000 ರೂ. ತೆಗೆದುಕೊಳ್ಳಿ, ನಂತರ ಸಹಿ ಮಾಡುವ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಮಂಗಳೂರು ಲೋಕಾಯುಕ್ತ ಪೆÇಲೀಸ್ ಠಾಣೆಯಲ್ಲಿ ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ ಮತ್ತು ಸಿಬ್ಬಂದಿ ಪ್ರದೀಪ್ ವಿರುದ್ಧ ಪ್ರಕರಣ ದಾಖಲಾಗಿದೆ.
ಮೇ 28 ರಂದು ಮಂಗಳೂರು ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿರವರು ಚಾಲಕ ಮಧುರವರ ಮೂಲಕ ರೂ 50,000 ಲಂಚದ ಹಣ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸ್ರ ಬಲೆಗೆ ಬಿದ್ದಿರುತ್ತಾರೆ. ಅಧಿಕಾರಿ ಮತ್ತು ಸಿಬ್ಬಂದಿಯನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.
ಕರ್ನಾಟಕ ಲೋಕಾಯುಕ್ತ, ಮಂಗಳೂರು ವಿಭಾಗ ಪೊಲೀಸ್ ಅಧೀಕ್ಷಕ ಕುಮಾರಚಂದ್ರ ಅವರ ಮಾರ್ಗದರ್ಶನದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕ ಡಾ. ಗಾನ ಪಿ ಕುಮಾರ್, ಸುರೇಶ್ ಕುಮಾರ್.ಪಿ, ಪೊಲೀಸ್ ನಿರೀಕ್ಷಕಿ ಭಾರತಿ ಜಿ, ಚಂದ್ರಶೇಖರ್ ಕೆ.ಎನ್ ಹಾಗೂ ಉಡುಪಿ ಲೋಕಾಯುಕ್ತ ಪೊಲೀಸ್ ಠಾಣಿಯ ಪೊಲೀಸ್ ನಿರೀಕ್ಷಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.