ಮಂಗಳೂರಿನಲ್ಲಿ ನಾಳೆ ನಡೆಯಲಿರುವ ಪ್ರವಾಸೋದ್ಯಮ ಸಮಾವೇಶ ಮತ್ತು ಪಿಲಿಕುಳದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವತಿಯಿಂದ ಅಭಿವೃದ್ಧಿಪಡಿಸಲಾದ “ಪಿಲಿಕುಳ ರೆಸಾರ್ಟ್” ಉದ್ಘಾಟನಾ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಆಗಮಿಸುತ್ತಿರುವುದು ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಮಹತ್ವದ ಹಾಗೂ ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಮಂಜುನಾಥ ಭಂಡಾರಿ ಅಭಿಮತ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಜಿಲ್ಲೆಗೆ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡುವುದಾಗಿ ನೀಡಿದ್ದ ಭರವಸೆಯಂತೆ, ಈಗ ಆ ದಿಕ್ಕಿನಲ್ಲಿ ಸರ್ಕಾರ ಕ್ರಮ ಕೈಗೊಂಡಿರುವುದು ಸಂತಸದ ವಿಚಾರವಾಗಿದೆ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯ ಪ್ರವಾಸೋದ್ಯಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪ್ರೇರಣಾದಾಯಕವಾಗಿದ್ದು, ಇದರ ಪ್ರಯೋಜನವನ್ನು ಪ್ರವಾಸೋದ್ಯಮ ಕ್ಷೇತ್ರಕ್ಕೆ ಈಗಾಗಲೇ ಕೊಡುಗೆ ನೀಡಿರುವವರು ಹಾಗೂ ಯುವ ಉದ್ಯಮಿಗಳು ಸಮರ್ಪಕವಾಗಿ ಬಳಸಿಕೊಳ್ಳಬೇಕು ಎಂದು ಮಂಜುನಾಥ ಭಂಡಾರಿ ತಿಳಿಸಿದ್ದಾರೆ.
ವರದಿ: ಶಂಶೀರ್ ಬುಡೋಳಿ



