ಮೈಸೂರು: ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಸೋಮವಾರ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿ, ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ ಎಂದರು.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-೧೯೭೬ರ ಸೆಕ್ಷನ್ ೪ ಮತ್ತು ಸೆಕ್ಷನ್ ೫೦೦ ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.
ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬಂಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ ೨೦೧೮ರ ವಾರ್ಡ್ ಡಿ-ಲಿಮಿಟೆಷನ್ ಅನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಹೂಟಗಳ್ಳಿ ನಗರಸಭೆ, ಶ್ರೀರಾಂಪುರ, ರಮ್ಮನಹಳ್ಳಿ, ಕಡಕೋಳ, ಬೋಗಾದಿ ಪಟ್ಟಣ ಪಂಚಾಯಿತಿ, ಚಾಮುಂಡಿ ಬೆಟ್ಟ,
ಸಿದ್ದಲಿಂಗಪುರ, ಇಲವಾಲ, ಆಲನಹಳ್ಳಿ ಗ್ರಾಮ ಪಂಚಾಯಿತಿಗಳನ್ನು ಸೇರಿಸಿಕೊಳ್ಳಬೇಕು ಎಂದು ಕೋರಿದರು.