ಬೆಳಗಾವಿ: ಆಡಳಿತಾತ್ಮಕ ಅನುಕೂಲಕ್ಕಾಗಿ ಮತ್ತು ಸಮಗ್ರ ಅಭಿವೃದ್ಧಿಗಾಗಿ ಉತ್ತರ ಕರ್ನಾಟಕದ 15 ಜಿಲ್ಲೆಗಳನ್ನು ಒಳಗೊಂಡು ಪ್ರತ್ಯೇಕ ರಾಜ್ಯ ರಚನೆಗೆ ಆಗ್ರಹಿಸಿ ಕಾಗವಾಡದ ಕಾಂಗ್ರೆಸ್ ಶಾಸಕ ಭರಮಗೌಡ (ರಾಜು) ಕಾಗೆಯವರು ರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಕರ್ನಾಟಕ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.
ಬೀದರ, ಕಲಬುರ್ಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ಹಾವೇರಿ, ವಿಜಯನಗರ, ಬಳ್ಳಾರಿ, ದಾವಣಗೆರೆಯನ್ನು ಒಳಗೊಂಡ ಹೊಸ ರಾಜ್ಯ ರಚನೆಗೆ ನನ್ನ ಆಗ್ರಹವಿದೆ. ಕರ್ನಾಟಕ ಏಕೀಕರಣ ಆದಾಗಿನಿಂದ ಇಲ್ಲಿಯವರೆಗೂ ಎಲ್ಲ ಕ್ಷೇತ್ರಗಳಲ್ಲೂ ಈ ಭಾಗಕ್ಕೆ ನಿರಂತರವಾಗಿ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ಆಗುತ್ತಲೆ ಬಂದಿದೆ. ಪ್ರತ್ಯೇಕ ರಾಜ್ಯ ರಚನೆಯಿಂದ ಮತ್ತೊಂದು ಕನ್ನಡ ನಾಡು ನಿರ್ಮಾಣವಾಗುವುದು ನಮಗೆ ಹೆಮ್ಮೆಯ ವಿಷಯ ಎಂದು ರಾಜು ಕಾಗೆ ಪತ್ರದಲ್ಲಿ ಹೇಳಿದ್ದಾರೆ.
ಉತ್ತರ ಕರ್ನಾಟಕ ಹೋರಾಟ ಸಮಿತಿಯ ಜನಪ್ರತಿನಿಧಿಗಳ ಸಹಿ ಸಂಗ್ರಹ ಅಭಿಯಾನಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ. ಈಗಾಗಲೇ. ಒಂದು ಕೋಟಿಗೂ ಅಧಿಕ ಜನರಿಂದ ಸಹಿಯೊಂದಿಗೆ ಲಿಖಿತ ಅಭಿಪ್ರಾಯವನ್ನು ಪಡೆದುಕೊಂಡಿದ್ದಾರೆ. ಈ ಭಾಗದ ಎಲ್ಲ ವರ್ಗದ ಜನರು ಅವರ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರತ್ಯೇಕ ರಾಜ್ಯವನ್ನು ಕೇಳುತ್ತಿದ್ದಾರೆ. ಮನವಿಯನ್ನು ಪರಿಗಣಿಸಿ, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ನಿರ್ಮಾಣಕ್ಕೆ ಸೂಕ್ತ ಶಿಫಾರಸು ಮಾಡಬೇಕೆಂದು ಪತ್ರದಲ್ಲಿ ಒತ್ತಾಯಿಸಿದ್ದಾರೆ.
ಈ ವಿಚಾರವಾಗಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಶಾಸಕ ರಾಜು ಕಾಗೆ, ಬೆಳಗಾವಿಯಲ್ಲಿ ನಡೆಯುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ರಾಜ್ಯ ಬೇಡಿಕೆ ವಿಚಾರ ಪ್ರಸ್ತಾಪ ಮಾಡುತ್ತೇನೆ ಎಂದು ಹೇಳಿದ್ದಾರೆ.



