ಬೆಂಗಳೂರು: ಬರಗಾಲದಿಂದ ಬಸವಳಿದ್ದ ಕರ್ನಾಟಕದಲ್ಲಿ ಈಗ ಮುಂಗಾರು ಮಳೆಯ ಆರ್ಭಟ ಜೋರಾಗಿದೆ. ಮುಂದಿನ 3 ದಿನಗಳ ಕಾಲ ಕರಾವಳಿ ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲಭಾಗಗಳಲ್ಲಿ ಭಾರೀ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಗ್ಗೆ ಹವಾಮಾನ ಇಲಾಖೆಯ ವಿಜ್ಞಾನಿ ಡಾ.ಲತಾ ಮಾಹಿತಿ ನೀಡಿದ್ದು, ಕರಾವಳಿ ಜಿಲ್ಲೆಗಳು, ಹಾಸನ, ಶಿವಮೊಗ್ಗ, ಮಡಿಕೇರಿ ಮತ್ತು ಬೆಳಗಾವಿ ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಈ ಭಾಗಗಳಿಗೆ ಇನ್ನೂ 2 ದಿನಗಳ ಕಾಲ ಯಲ್ಲೋ ಅಲಟ್೯ ಘೋಷಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
3 ದಿನಗಳ ಬಳಿಕ ಈ ಭಾಗಗಳಲ್ಲಿ ಹಂತ-ಹಂತವಾಗಿ ಮಳೆ ಕಡಿಮೆಯಾಗಲಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಕಲಬುರಗಿ, ಯಾದಗಿರಿ ರಾಯಚೂರು, ಭಾಗಗಳಲ್ಲಿ ಮಳೆ ಪ್ರಮಾಣ ಕಡಿಮೆ ಇದೆ. ಇನ್ನೂ 10 ದಿನಗಳ ವರೆಗೂ ಮೋಡ ಮುಸುಕಿದ ವಾತಾವರಣ ಮುಂದುವರಿಯಲಿದೆ.
ಈ ಭಾಗಗಳಲ್ಲಿ ಮಳೆ ಸಾಧ್ಯತೆ ಕಡಿಮೆ, ಮಳೆ ಬಂದರೂ ಕೂಡ ಮಳೆಯ ಪ್ರಮಾಣ ತೀರಾ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.



