ನವದೆಹಲಿ/ಮಂಡ್ಯ: ೨೦೧೯ರ ಲೋಕಸಭಾ ಚುನಾವಣೆ ವೇಳೆ ಮಂಡ್ಯ ಕ್ಷೇತ್ರ ಇಡೀ ದೇಶದಲ್ಲಿಯೇ ಸದ್ದು ಮಾಡಿತ್ತು. ಈಗ ಮತ್ತೆ ಆ ಎಲ್ಲಾ ಲಕ್ಷಣಗಳು ರಾಜ್ಯ ರಾಜಕಾರಣದಲ್ಲಿ ಕಾಣಿಸುತ್ತಿವೆ. ಜೆಡಿಎಸ್-ಬಿಜೆಪಿ ಮೈತ್ರಿ ಬಹುತೇಕ ಖಚಿತವಾಗಿದ್ದು, ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ತನ್ನ ತೆಕ್ಕೆಗೆ ನೀಡುವಂತೆ ಬಿಜೆಪಿಗೆ ಕೇಳಿದೆ. ಸುಮಲತಾ ಅಂಬರೀಶ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಂಡ್ಯ ಕ್ಷೇತ್ರದ ಸಮಸ್ಯೆ ಜೊತೆ ಜಿಲ್ಲಾ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸುಮಲತಾ ಅಂಬರೀಶ್ ಅವರು ೭೩ನೇ ಜನ್ಮ ದಿನದ ಶುಭಾಶಯಗಳನ್ನು ಕೋರಿದ್ದಾರೆ. ಅಲ್ಲದೇ ಇತ್ತೀಚೆಗಷ್ಟೇ ನಡೆದ ಉ೨೦ ಶೃಂಗಸಭೆಯ ಯಶಸ್ಸಿಗೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಲ್ಲದೇ ಇದೆ ಸಮಯದಲ್ಲಿ ಮಂಡ್ಯ ಕ್ಷೇತ್ರದ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.
ಜೆಡಿಎಸ್- ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದರಿಂದ ಮಂಡ್ಯ ಕೈ ಟಿಕೆಟ್ ಸಿಗದ ಹಿನ್ನೆಲೆ ಸುಮಲತಾ ಅಂಬರೀಶ್ ಸೆರಗೊಡ್ಡಿ ಸ್ವಾಭಿಮಾನದ ಹೆಸರಲ್ಲಿ ಗೆಲುವು ಕಂಡಿದ್ದರು. ಬಳಿಕ ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಆಗುತ್ತಿದ್ದಂತೆ ಸುಮಲತಾ ಅಂಬರೀಶ್ ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದರು.
೨೦೨೪ರ ಚುನಾವಣೆಗೆ ಸುಮಲತಾ ಅಂಬರೀಶ್ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ. ಆದ್ರೆ ಈ ಬಾರಿ ಜೆಡಿಎಸ್ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಮುಂದಾಗಿದೆ. ಅಲ್ಲದೇ ಮಂಡ್ಯ ಕ್ಷೇತ್ರವನ್ನು ತಮಗೆ ನೀಡಬೇಕೆಂದು ದಳಪತಿಗಳು ಬೇಡಿಕೆ ಇಟ್ಟಿದ್ದಾರೆ. ಹೀಗಾಗಿ ಸುಮಲತಾ ಅಂಬರೀಶ್ಗೆ ಟೆನ್ಷನ್ ಶುರುವಾಗಿದೆ. ಇದರ ಬೆನ್ನಲ್ಲೇ ಇದೀಗ ಮೋದಿ ಅವರನ್ನು ಭೇಟಿ ಮಾಡಿ ಮಂಡ್ಯದ ಬಗ್ಗೆ ಮಾತುಕತೆ ನಡೆಸಿರುವುದಾಗಿ ಹೇಳಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ.