ಮೈಸೂರು: ಹಿಂದು ಸಮಾಜದಲ್ಲಿ ಆಂತರಿಕವಾಗಿ ಬಾಂಧವ್ಯ ಮತ್ತು ಸಾಮರಸ್ಯವನ್ನು ಸುದೃಡಗೊಳಿಸುವ ಧರ್ಮ ಜಾಗೃತಿಯನ್ನು ಮೂಡಿಸುವ ಸಲುವಾಗಿ ತಮ್ಮ 36 ನೇ ಚಾತುರ್ಮಾಸ್ಯದ ಸಂದರ್ಭದಲ್ಲಿ ಹಮ್ಮಿಕೊಂಡ ಹತ್ತಾರು ಧಾರ್ಮಿಕ ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಸರಣಿಯಲ್ಲಿ ದಲಿತರು ಮತ್ತು ಹಿಂದುಳಿದ ವರ್ಗಗಳ ಬಡಾವಣೆಗಳಿಗೆ ಸಾಮರಸ್ಯದ ನಡಿಗೆಯನ್ನು ಆದ್ಯತೆಯಲ್ಲಿ ಹಮ್ಮಿಕೊಳ್ಳುವಂತೆ ಚಾತುರ್ಮಾಸ್ಯ ಸಮಿತಿಗೆ ಸೂಚಿಸಿದ್ದ ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಧರ್ಮಜಾಗರಣ ವಿಭಾಗ ಮತ್ತು ಸಾಮರಸ್ಯ ವೇದಿಕೆಗಳ ಜಂಟಿ ಸಂಯೋಜನೆಯಲ್ಲಿ ಇನ್ನೂರಕ್ಕೂ ಅಧಿಕ ಮನೆಗಳನ್ನು ಹೊಂದಿರುವ ಬಡಾವಣೆಗೆ ಭೇಟಿ ನೀಡಿದರು.
ಮನೆ ರಸ್ತೆಗಳುದ್ದಕ್ಕೂ ಸಾಲು ಸಾಲು ರಂಗೋಲಿ, ಕೇಸರಿ ಪತಾಕೆ , ತಳಿರು ತೋರಣ ಹೂವಿನ ಮಾಲೆಗಳ ಮೂಲಕ ಅಲಂಕರಿಸಲಾಗಿತ್ತು.
ಶ್ರೀಗಳು ಆಗಮಿಸುತ್ತಿದ್ದಂತೆ ಸಂಭ್ರಮ ಮುಗಿಲು ಮುಟ್ಟಿತು.ಆರಂಭದಲ್ಲಿ ಐದು ಮನೆಗಳಿಗೆ ತೆರಳಿ ಮಠದಿಂದ ವಿತರಿಸಿದ್ದ ಹಿತ್ತಾಳೆಯ ಶ್ರೀ ರಾಮ ದೀಪ ಗಳನ್ನು ಬೆಳಗಿ ಮನೆಯ ದೇವರ ಭಾವಚಿತ್ರಗಳಿಗೆ ಹೂವನ್ನು ಏರಿಸಿ ಮಂಗಳಾರತಿ ಬೆಳಗಿದರು.
ಮನೆ ಮಂದಿ ಶ್ರೀಗಳ ಕಾಲಿಗೆ ನೀರೆರೆದು , ಅರಶಿನ ಕುಂಕುಮ , ಓಕುಳಿಯ ಆರತಿಗಳನ್ನು ಬೆಳಗಿ ಭಕ್ತಿಯಿಂದ ಬರಮಾಡಿಕೊಂಡರು. ಮನೆಗೆ ಬಂದ ಗುರುಗಳಿಗೆ ಫಲವಸ್ತುಗಳನ್ಬು ಅರ್ಪಿಸಿದರು.
ಪ್ರತೀ ಮನೆಗಳ ಸದಸ್ಯರನ್ನು ಆತ್ಮೀಯವಾಗಿ ಪರಿಚಯ ಮಾಡಿಕೊಂಡು ಯೋಗಕ್ಷೇಮ ವಿಚಾರಿಸಿದರು. ಎಲ್ಲ ಮನೆಗಳಿಗೂ ಶ್ರೀ ಕೃಷ್ಣನ ಸಿಹಿತಿಂಡಿ ಪ್ರಸಾದಗಳನ್ನು ವಿತರಿಸಿದರು .