ಕಾರವಾರ: ಮುರುಡೇಶ್ವರದಲ್ಲಿ ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿನಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ೭ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೋಲಾರದಿಂದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದವರ ಪೈಕಿ ನಾಲ್ಕು ಜನ ವಿದ್ಯಾರ್ಥಿನಿಯರು ನೀರು ಪಾಲಾದ ಬಳಿಕ ಉತ್ತರ ಕನ್ನಡ ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಒಂದೆಡೆ ಮುರುಡೇಶ್ವರ ಕಡಲ ತೀರದಲ್ಲಿ ನಿರ್ಬಂಧ ಹೇರಲಾಗಿದ್ದು, ಇನ್ನೊಂದೆಡೆ ಮುಖ್ಯ ಶಿಕ್ಷಕಿ ಸೇರಿ ಒಟ್ಟು ೭ ಶಿಕ್ಷಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿಕ್ಷಕರ ವಿರುದ್ದ ಪ್ರಕರಣ ದಾಖಲಿಸಲಾಗಿದ್ದು, ನಾಲ್ಕು ವಿದ್ಯಾರ್ಥಿನಿಯರ ಸಾವಿಗೆ ಕಾರಣ, ನಿರ್ಲಕ್ಷ್ಯ ಕುರಿತು ತನಿಖೆ ಕೈಗೊಂಡಿದ್ದಾರೆ.
ಕೋಲಾರದ ಮುಳಬಾಗಿಲು ತಾಲೂಕಿನ ಕೊತ್ತೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಮುರುಡೇಶ್ವರ ಕಡಲ ತೀರದಲ್ಲಿ ಆಟ ಆಡುವಾಗ ಶಾಲೆಯ ೭ ವಿದ್ಯಾರ್ಥಿನಿಯರು ನೀರು ಪಾಲಾಗಿದ್ದರು. ೭ ವಿದ್ಯಾರ್ಥಿನಿಯರ ಪೈಕಿ ೪ ವಿದ್ಯಾರ್ಥಿನಿಯರು ಸಾವನ್ನಪ್ಪಿದ್ದರು.