ಮೈಸೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವಾದ ಇಂದು ಜಿಲ್ಲಾಡಳಿತದ ವತಿಯಿಂದ ನಗರ ಓವಲ್ ಮೈದಾನದಲ್ಲಿ ನಡೆದ ಸಂವಿಧಾನ ಪೀಠಿಕೆ ಓದು ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಭಾರತದ ಸಂವಿಧಾನ ಪೀಠಿಕೆ ಮಾದರಿಯ ಮಾನವ ಸರಪಳಿ ನಿರ್ಮಿಸುವ ಮೂಲಕ ಎಲ್ಲರ ಗಮನ ಸೆಳೆದರು. ಅದ್ಬುತ ದೃಶ್ಯ ಡ್ರೋನ್ ಕ್ಯಾಮರಾದಲ್ಲಿ ಸೆರೆಯಾಗಿದೆ.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಹರೀಶ್ ಗೌಡ ಮಾತನಾಡಿ, ಸಮಾನತೆಯ ಜೀವನಕ್ಕೆ ಸಂವಿಧಾನ ಅಡಿಪಾಯ. ಸಂವಿಧಾನವನ್ನು ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮ ಸಮಾಜದ ನಿರ್ಮಾಣ ಮಾಡುವುದರ ಜೊತೆಗೆ ಸಮಾನತೆಯಿಂದ ಜೀವನ ನಡೆಸಬೇಕು. ಕರ್ನಾಟಕ ರಾಜ್ಯ ಸರ್ಕಾರವು ಈ ದಿನ ಸಂವಿಧಾನ ಓದು ಕಾರ್ಯಕ್ರಮವನ್ನು ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಹಮ್ಮಿಕೊಂಡಿದ್ದು, ಪ್ರತಿಯೊಬ್ಬರಿಗೂ ಕೂಡ ಸಂವಿಧಾನದ ಅರಿವು ಮೂಡಿಸಲು ಮುಂದಾಗಿದೆ ಎಂದರು.
ಶಾಸಕ ತನ್ವೀರ್ ಸೇಠ್ ಮಾತನಾಡಿ, ಸಂವಿಧಾನದ ಪೀಠಿಕೆಯನ್ನು ನಾವೆಲ್ಲರೂ ಕೂಡ ಜೀವನಕ್ಕೆ ಅಳವಡಿಸಿಕೊಳ್ಳಬೇಕು. ಭವ್ಯ ಭಾರತವನ್ನು ಕಟ್ಟುವ ಪರಿಕಲ್ಪನೆಯು ನಮ್ಮ ಮುಂದೆ ಬಂದಾಗ ೧೨ನೇ ಶತಮಾನದ ಬಸವಣ್ಣನವರ ಅನುಭವ ಮಂಟಪ ಕೂಡ ಒಂದು ಉದಾಹರಣೆಯಾಗಿದೆ. ಸಂವಿಧಾನದ ವಿಚಾರವನ್ನು ತಿಳಿಯಲು ವಿದ್ಯಾರ್ಥಿಗಳು ಶಾಲಾ ಕಾಲೇಜಿನಲ್ಲಿನ ಗ್ರಂಥಾಲಯದ ಉಪಯೋಗವನ್ನು ಪಡೆದುಕೊಳ್ಳಿ ಎಂದರು.
ದೇಶದ ಇತಿಹಾಸದಲ್ಲಿ ಮೈಸೂರಿನ ಮಹಾರಾಜರು ಪ್ರಜಾಪ್ರಭುತ್ವವನ್ನು ನಿರ್ಮಾಣ ಮಾಡುವಲ್ಲಿ ಯಶಸ್ವಿಯನ್ನು ಕಂಡು, ಭಾರತದಲ್ಲಿ ಪ್ರಥಮ ಬಾರಿಗೆ ಪ್ರಜಾಪ್ರಭುತ್ವ ಸಂಸ್ಥೆಯನ್ನು ಕಟ್ಟಿದರು. ಈ ನೆಲದಲ್ಲಿ ನಾವು ೭೩ ವರ್ಷಗಳ ನಂತರ ಸಂವಿಧಾನದ ಪ್ರಸ್ತಾವನೆಯನ್ನು ಸಾರ್ವಜನಿಕವಾಗಿ ಯಾವುದೇ ಭೇದ-ಭಾವ, ಲಿಂಗ, ಜಾತಿ ಭೇದವಿಲ್ಲದೆ ಎಲ್ಲರೂ ಒಟ್ಟಾಗಿ ಸೇರಿ ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ ಈ ದೇಶದ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಬೇಕು ಎಂದು ತಿಳಿಸಿದರು.