ಮೈಸೂರು: ಹೊಸ ವರ್ಷಾಚರಣೆ ಹಿನ್ನಲೆ ಮೈಸೂರಿನಲ್ಲಿ ರಾತ್ರಿ 1 ಗಂಟೆವರೆಗೆ ವರ್ಷಾಚರಣೆಗೆ ಅವಕಾಶ ನೀಡಲಾಗಿದ್ದು, ಸರ್ಕಾರ ನಿಗದಿಪಡಿಸಿರುವ ಸಮಯ ಪಾಲಿಸಬೇಕು. ತಪ್ಪಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೋಟೆಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್, ಹೋಂಸ್ಟೇ ಸರ್ವಿಸ್ ಅಪಾರ್ಟ್ಮೆಂಟ್, ಅಪಾರ್ಟ್ಮೆಂಟ್ ಅಸೋಸಿಯೇಷನ್, ಮಾಲ್ಸ್, ಸಂಘ ಸಂಸ್ಥೆಗಳು ರಾತ್ರಿ 1 ಗಂಟೆಗೆ ಕಾರ್ಯಕ್ರಮ ಮುಗಿಸುವುದು ಕಡ್ಡಾಯ ಎಂದು ತಿಳಿಸಿದ್ದಾರೆ. ನ್ಯೂಇಯರ್ ನೆಪದಲ್ಲಿ ಅಸಭ್ಯ ವರ್ತನೆ ತಡೆಯಲು 36 ವಿಶೇಷ ಕಾರ್ಯಪಡೆ ತಂಡ ರಚನೆ ಮಾಡಲಾಗಿದೆ. ಮಹಿಳೆಯರ ರಕ್ಷಣೆಗಾಗಿ 8 ಸುರಕ್ಷತಾ ಪಿಂಕ್ ಗರುಡಾ (ಚಾಮುಂಡಿ ಪಡೆ) ರಚನೆ ಮಾಡಲಾಗಿದೆ. ನಗರದ ಪ್ರಮುಖ ಸ್ಥಳದಲ್ಲಿ ಶ್ವಾನದಳ ಮತ್ತು ವಿದ್ವಂಸಕ ಕೃತ್ಯ ತಡೆಗಾಗಿ 4 ತಂಡ ನಿಯೋಜಿಸಲಾಗಿರುತ್ತದೆ.
ಮೈಸೂರು ನಗರದಲ್ಲಿರುವ 59 ಸಿಸಿ ಟಿವಿ ಜೊತೆಗೆ 275 ಸಿಸಿಟಿವಿ ಅಳವಡಿಸಲಾಗಿದ್ದು, ಪೊಲೀಸ್ ಕಂಟ್ರೋಲ್ ರೂಂ ಮೂಲಕ ಕಣ್ಗಾವಲು ಇರಿಸಲಾಗಿದೆ. ವೀಲಿಂಗ್, ಸ್ಪೀಡ್, ಕರ್ಕಶ ಶಬ್ದ, ಕುಡಿದು ವಾಹನ ಚಾಲನೆ ತಡೆಗಾಗಿ ಸಂಚಾರ ಪೊಲೀಸರು, ತಜ್ಞರನ್ನೊಳಗೊಂಡ ಕ್ಷಿಪ್ರ ಪಡೆ ರಚನೆ ಮಾಡಲಾಗಿದೆ.
ರಿಂಗ್ ರೋಡ್ ನಲ್ಲಿ 8 ಹೈವೇ ಪೆಟ್ರೋಲ್ ವಾಹನ ನಿಯೋಜನೆ ಮಾಡಲಾಗುತ್ತದೆ. ಒಟ್ಟು 18 ಗರುಡಾ ವಾಹನಗಳ ಗಸ್ತು ತಿರುಗಲಿದೆ. ನಗರದ ಹೊರವಲಯದಲ್ಲಿ 12 ಕಡೆ ಚೆಕ್ ಪೊಸ್ಟ್ ವ್ಯವಸ್ಥೆ ಮಾಡಲಾಗುತ್ತದೆ. ನಗರದ ಒಳ ಭಾಗದಲ್ಲಿ 18 ಕಡೆ ಚಕ್ ಪೊಸ್ಟ್ ನಿರ್ಮಿಸಿ ಕಿಡಿಗೇಡಿಗಳ ಮೇಲೆ ನಿಗಾವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ಹೊಸ ವರ್ಷ ಆಚರಣೆಯ ಕಾರ್ಯಕ್ರಮ ಆಯೋಜನೆಗಾಗಿ ನಗರ ಪೊಲೀಸ್ ಸಾಯಕ್ತರ ಕಚೇರಿಯಲ್ಲಿ ಅನುಮತಿ ಕಡ್ಡಾಯವಾಗಿದ್ದು, ಧ್ವನಿವರ್ಧಕ ಅಳವಡಿಸುವುದು ಪ್ರದೇಶಕ್ಕೆ ಮಾತ್ರ ಸೀಮಿತವಾಗಿರಬೇಕು. ಸಾಂಸ್ಕೃತಿಕ ಕಾರ್ಯಕ್ರಮದ ನೆಪದಲ್ಲಿ ಅಶ್ಲೀಲ ಅರಬೆತ್ತಲೆ ಮಾದಕ ವಸ್ತುಗಳ ಸೇವನೆ ಜೂಜಾಟ ನಿಷೇಧ ಮಾಡಲಾಗಿದೆ ಎಂದು ಹೇಳಿದರು.
ನ್ಯೂಇಯರ್ ಬಂದೋಬಸ್ತ್ ಗಾಗಿ ಡಿಸಿಪಿ 3, ಎಸಿಪಿ 12, ಪಿಐ 30, ಎಎಸ್ಪಿ 70, ಹೆಚ್ಸಿ/ಪಿಸಿ 550, ಸಿಬ್ಬಂದಿ 80, ಸಿಎಆರ್ 12 ತುಕಡಿ, ಕೆಎಸ್ಆರ್ ಪಿ 4 ತಂಡ, ಕಮಾಂಡೋ ಪಡೆ 4, ಶ್ವಾನದಳ 4 ತಂಡ, ಎಎಸ್ಸಿ 4 ತಂಡ ಸಶಸ್ತ್ರ ಪಡೆಗಳನ್ನು ನಿಯೋಜನೆ ಮಾಡಲಾಗುತ್ತದೆ ಎಂದರು.
ಚಾಮುಂಡಿ ಬೆಟ್ಟಕ್ಕೆ 31 ಸಂಜೆ 7ರವರೆಗೆ ಮಾತ್ರ ಪ್ರವೇಶವಿರಲಿದೆ. ರಾತ್ರಿ 9ಕ್ಕೆ ತಾವರೆಕಟ್ಟೆ ಗೇಟ್ ಬಂದ್ ಮಾಡಲಾಗುತ್ತದೆ. ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಜನರಿಗೆ ಇದು ಅನ್ವಯಿಸುವುದಿಲ್ಲ ಎಂದರು.
ಕಾನೂನು ಪಾಲಿಸಿ ಹೊಸ ವರ್ಷ ಆಚರಣೆ ಆಚರಿಸಿ. ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಹೇಳಿದರು.