ಬೆಂಗಳೂರು: ಬೆಂಗಳೂರು–ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ ಸಂಬಂಧ ಸುಪ್ರೀಂ ಕೋರ್ಟ್ನಲ್ಲಿ ರಿಟ್ ಅರ್ಜಿ ಹಾಕಿರುವ ನೈಸ್ ಕಂಪನಿಯ ಕ್ರಮಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಿಲುವನ್ನು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಸ್ವಾಗತಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಇಳಿ ವಯಸ್ಸಿನಲ್ಲಿ ನನ್ನನ್ನು ಪ್ರತಿವಾದಿಯಾಗಿಸಿ ಅರ್ಜಿ ಹಾಕಿರುವುದು ಎಷ್ಟು ಸರಿ ಎಂದು ನಾನು ಪ್ರಶ್ನಿಸಿದ್ದೆ. ಡಿ.ಕೆ.ಶಿಕುಮಾರ್ ಸಹ ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಅವರು ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆಯೇ ಎಂಬುದನ್ನು ನೋಡಬೇಕು ಎಂದಿದ್ದಾರೆ.
ಇನ್ನೂ ಈ ಯೋಜನೆ ಬಗ್ಗೆ ಮುಖ್ಯಮಂತ್ರಿ ಅವರಿಗೆ ಈ ಹಿಂದೆಯೇ ಪತ್ರ ಬರೆದಿದ್ದೆ. ಎಷ್ಟು ಭೂಮಿ ತೆಗೆದುಕೊಂಡಿದ್ದಾರೆ ಮತ್ತು ಎಷ್ಟು ಬಳಕೆ ಮಾಡಿಕೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ನೀಡಿ ಎಂದು ಕೋರಿದ್ದೆ. ಈ ವಿಚಾರದಲ್ಲಿ ಅಶೋಕ್ ಖೇಣಿ ವಿರುದ್ಧ ಸರ್ಕಾರವು ಕ್ರಮ ತೆಗೆದುಕೊಂಡರೆ ಸಂತೋಷ ಎಂದು ಹೇಳಿದ್ದಾರೆ.
ಈ ಸಂಬಂಧ ಸ್ಪಷ್ಟನೆ ನೀಡಿರುವ ನೈಸ್ ಸಂಸ್ಥೆ, ದೇವೇಗೌಡ ಅವರ ಹೇಳಿಕೆ ವಾಸ್ತವಕ್ಕೆ ವಿರುದ್ಧವಾಗಿದೆ. ನೈಸ್ ಸಂಸ್ಥೆಯು ಸರ್ಕಾರ ಹಾಗೂ ರೈತರ ವಿರುದ್ಧ ಯಾವುದೇ ಹೊಸ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಿದ್ದು, ನ್ಯಾಯಾಲಯದ ನಿರ್ದೇಶನದ ಮೇಲೆಯೇ ಮುಂದಿನ ಹೆಜ್ಜೆ ಇಡಲಾಗುತ್ತಿದೆ ಎಂದು ತಿಳಿಸಿದೆ.
ಈ ವೇಳೆ ಬಳ್ಳಾರಿ ಗಲಾಟೆ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ ಹೆಚ್.ಡಿ ದೇವೇಗೌಡರು, ಈ ಬಗ್ಗೆ ನಾನು ಮಾತನಾಡಲ್ಲ ಹೆಚ್ ಡಿ ಕುಮಾರಸ್ವಾಮಿ 2 ಬಾರಿ ಸಿಎಂ ಆಗಿದ್ದಾಗ ಸಾಕಷ್ಟು ಕ್ರಮ ಕೈಗೊಂಡಿದ್ದರು. ಹೆಚ್.ಡಿಕೆ ವಿರೋಧ ಪಕ್ಷದ ನಾಯಕನಾಗಿಯೂ ಹೋರಾಡಿದ್ದರು ಎಂದರು.



