ಹಾಸನ: ಬಾಲಕಾರ್ಮಿಕ ಮುಕ್ತ ಜಿಲ್ಲೆಯಾಗುವ ಉದ್ದೇಶದಿಂದ ಹಾಸನ ಜಿಲ್ಲೆ ಹಾಗೂ ಎಲ್ಲಾ ತಾಲ್ಲೂಕಿನಾದ್ಯಂತ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ.
ಆಲೂರು, ಅರಸೀಕೆರೆ, ಬೇಲೂರು, ಚನ್ನರಾಯಪಟ್ಟಣ ತಾಲ್ಲೂಕುಗಳಲ್ಲಿ ತಹಶಿಲ್ದಾರ ರವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಮಟ್ಟದ ಸಲಹಾ ಸಮಿತಿಯನ್ನು ಮಾಡಿ ನಂತರ ಬಾಲ ಹಾಗೂ ಕಿಶೋರ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ. ಸದರಿ ರಕ್ಷಣಾ ಕಾರ್ಯಾಚರಣೆಯಲ್ಲ್ಲಿ ಒಬ್ಬ ಬಾಲಕಾರ್ಮಿಕ ಹಾಗೂ 6 ಕಿಶೋರ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ ಹಾಗೂ ತಪ್ಪಿತಸ್ಥ ಮಾಲೀಕರಿಗೆ ನೋಟಿಸ್ ನೀಡಲಾಗಿದೆ ಹಾಗೂ ಮೊಕದ್ದಮೆ ಹೂಡಲಾಗುವುದು. ಪಾಲನೆ-ಪೋಷಣೆ ರಕ್ಷಣೆಯ ಹಿತದೃಷ್ಟಿಯಿಂದ 03 ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ಒಪ್ಪಿಸಲಾಗಿದೆ ಹಾಗೂ ಉಳಿದ 04 ಮಕ್ಕಳ ಪಾಲಕರಿಗೆ ಕರೆಸಿ ಶಿಕ್ಷಣದ ಮಹತ್ವ ತಿಳಿಸಿ, ಕೆಲಸಕ್ಕೆ ಕಳಿಸಿದಂತೆ ಎಚ್ಚರಿಕೆ ನೀಡಿ ಪಾಲಕರ ವಶಕ್ಕೆ ಒಪ್ಪಿಸಲಾಗಿದೆ.
ಸದರಿ ಕಾರ್ಯಾಚರಣೆಯಲ್ಲಿ ಆಯಾ ತಾಲ್ಲೂಕು ತಹಶೀಲ್ದಾರರು, ಕಾರ್ಮಿಕ ಅಧಿಕಾರಿಗಳು, ಹಿರಿಯ ಕಾರ್ಮಿಕ ನಿರೀಕ್ಷಕರು/ಕಾರ್ಮಿಕ ನಿರೀಕ್ಷಕರು, ಬಾಲಕಾರ್ಮಿಕ ಮತ್ತು ಕಿಶೋರಾವಸ್ಥೆ ಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ ಕಾಯ್ದೆ 1986 ಹಾಗೂ 2016)ರ ತಿದ್ದುಪಡಿ ಕಾಯ್ದೆಯಡಿ ನೇಮಕವಾದ ನಿರೀಕ್ಷಕರುಗಳಾದ ಕಾರ್ಯನಿರ್ವಣಾಧಿಕಾರಿ ತಾಲ್ಲೂಕು ಪಂಚಾಯತ್, ನಗರಸಭೆ ಮುಖ್ಯಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖಾ ಸಿಬ್ಬಂದಿ, ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಹಾಗೂ ಇವರೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ, ಎಸ್.ಜೆ.ಪಿ.ಯು ಘಟಕದ ಸಿಬ್ಬಂದಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿ ಮತ್ತು ಜಿಲ್ಲಾ ಯೋಜನಾ ನಿರ್ದೇಶಕರು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಎನ್.ಜಿ.ಓ ಇವರು ಪಾಲ್ಗೊಂಡಿದ್ದರು.
ಬಾಲ ಕಾರ್ಮಿಕ ಪದ್ಧತಿಯ ಕುರಿತು ಕರಪತ್ರ ಹಾಗೂ ಬಿತ್ತಿಪತ್ರ ಅಂಟಿಸುವುದರ ಮೂಲಕ ಸಾರ್ವಜನಿಕರಲ್ಲಿ ಹಾಗೂ ಅಂಗಡಿ, ವಿವಿಧ ಸಂಸ್ಥೆಗಳ ಮಾಲೀಕರಲ್ಲಿ ಅರಿವು ಮೂಡಿಸಲಾಯಿತು.
ಮಕ್ಕಳನ್ನು ಕಾನೂನು ಬಾಹಿರವಾಗಿ ಕೆಲಸಕ್ಕೆ ನೇಮಿಸಿಕೊಂಡಿದ್ದ ಮಾಲೀಕರ ವಿರುದ್ದ ಕಾನೂನು ಕ್ರಮಕೈಗೊಳ್ಳಲಾಗುವುದು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ಉದ್ದಿಮೆಯಲ್ಲಿ ಹಾಗೂ 14 ರಿಂದ 18 ವರ್ಷದೊಳಗಿನ ಕಿಶೋರರನ್ನು ಅಪಾಯಕಾರಿ ಕೆಲಸದಲ್ಲಿ ದುಡಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಮಕ್ಕಳು ಕೆಲಸದಲ್ಲಿ ತೊಡಗಿರುವುದು ಕಂಡು ಬಂದಲ್ಲಿ ಕಾರ್ಮಿಕ ಸಹಾಯವಾಣಿ 155214 ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಹಾಸನ ದೂರವಾಣಿ ಸಂಖ್ಯೆ-08172-235447 ಹಾಗೂ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಲು ಜಿಲ್ಲಾ ಕಾರ್ಮಿಕ ಅಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.