ಬಳ್ಳಾರಿ: 21ನೇ ಶತಮಾನಕ್ಕೆ ಕಾಲಿಟ್ಟರು ಕೂಡ ಇನ್ನೂ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯಿಂದ ಹೆಣ್ಣು ಮಕ್ಕಳು ನೋವನ್ನು ಅನುಭವಿಸುತ್ತಿದ್ದಾರೆ. ಇದಕ್ಕೆ ಮೂಲ ಕಾರಣ ಶಿಕ್ಷಣ, ತಂದೆ ತಾಯಿ ಹೆಣ್ಣು ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ 2006 ಕಾನೂನು ಜಾರಿಗೆ ಆದರೂ ಇನ್ನೂ ಕೂಡ ಬಾಲ್ಯವಿವಾಹಗಳು ನಡೆಯುತ್ತಿರುವುದು ತುಂಬಾ ಬೇಸರದ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಎಸ್.ಎಚ್.ಪುಷ್ಪಾಂಜಲಿ ದೇವಿ ಅವರು ಅಭಿಪ್ರಾಯ ವ್ಯಕ್ತಪಡಿಸಿದರು.
ರೀಡ್ಸ್ ಸಂಸ್ಥೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಸಿಎಸಿಎಲ್ ಕರ್ನಾಟಕ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಾ.ರಾಜ್ಕುಮಾರ್ ರಸ್ತೆಯ ಬಿಡಿಎ ಫುಟ್ಬಾಲ್ ಮೈದಾನ ವೇದಿಕೆ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ಮತ್ತು ದೇವದಾಸಿ ಪದ್ಧತಿಯ ತಡೆಗಟ್ಟುವಲ್ಲಿನ ಸವಾಲುಗಳು ಮತ್ತು ಪರಿಹಾರ ಕುರಿತ ಎರಡನೆ ದಿನದ ರಾಜ್ಯಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. 2016 ಕರ್ನಾಟಕ ತಿದ್ದುಪಡಿ ಕಾಯ್ದೆ ಪ್ರಕಾರ ಬಾಲ್ಯವಿವಾಹ ಮಾಡಿದರೆ ಹೆಣ್ಣು ಮಕ್ಕಳಿಗೂ ಶಿಕ್ಷೆ ಇದೆ. ಕನಿಷ್ಠ ಒಂದು ವರ್ಷ ಜೈಲು ಶಿಕ್ಷೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸುಮೋಟೋ ಕೇಸ್ ದಾಖಲಿಸಿಕೊಳ್ಳಬಹುದು ಎಂದರು.
2018 ರಿಂದ ಈಚೆ ಆದ ಪ್ರತಿಯೊಂದು ಬಾಲ್ಯವಿವಾಹ ಅನೂರ್ಜಿತ, ಅಸಿಂಧು, ಸರ್ಕಾರ ಮತ್ತು ಸ್ವಯಂ ಸೇವಾ ಸಂಸ್ಥೆಗಳು ಸಮುದಾಯದ ಜನರಿಗೆ, ಮಕ್ಕಳಿಗೆ, ಯುವ ಜನರಿಗೆ, ಹಿರಿಯರಿಗೆ ಅರಿವು ಮೂಡಿಸಿ ಈ ಪದ್ಧತಿಗಳನ್ನು ತಡೆಗಟ್ಟಲು ಸಹಕರಿಸಬೇಕು ಎಂದು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿ, ಬಾಲ್ಯ ವಿವಾಹದಿಂದ ಆಗುವ ತಾಯಿ ಮರಣ, ಶಿಶು ಮರಣ, ರಕ್ತ ಹೀನತೆ, ಅಪೌಷ್ಟಿಕತೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ದೇವದಾಸಿ ಸಮರ್ಪಣಾ ನಿಷೇಧ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ಕುರಿತು ಮಾಜಿ ದೇವದಾಸಿಯರಿಗೆ ಮತ್ತು ಅವರ ಮಕ್ಕಳಿಗೆ ಪುನರ್ವಸತಿ ಯೋಜನೆಗಳ ಬಗ್ಗೆ ಮಾಹಿತಿ ಸಹ ನೀಡಿದರು.
ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ಮಾತನಾಡಿ, ಸರಕಾರ ಮತ್ತು ಜನರ ಮಧ್ಯೆ ಸೇತುವೆಯಾಗಿ ಸ್ವಯಂಸೇವಾ ಸಂಸ್ಥೆಗಳು ಕೆಲಸ ಮಾಡುವುದು ಶ್ಲಾಘನೀಯ, ಸತತ ಪ್ರಯತ್ನದಿಂದ ಬಾಲ್ಯ ವಿವಾಹ ಮತ್ತು ದೇವದಾಸಿ ಪದ್ಧತಿಯನ್ನು ತಡೆಗಟ್ಟಬಹುದು ಎಂದರು.

ಈ ಸಂದರ್ಭದಲ್ಲಿ ರೀಡ್ಸ್ ಸಂಸ್ಥೆಯ ನಿರ್ದೇಶಕರು ಹನುಮಂತರೆಡ್ಡಿ, ರೀಡ್ಸ್ ಸಂಸ್ಥೆ ಕಾರ್ಯನಿರ್ವಾಹಕ ನಿರ್ದೇಶಕರು ಸಿ.ತಿಪ್ಪೇಶಪ್ಪ, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ನಿಕಟ ಪೂರ್ವ ಸದಸ್ಯ ಎಚ್.ಸಿ.ರಾಘವೇಂದ್ರ, ಬಾಲಕಾರ್ಮಿಕ ಯೋಜನೆ ಯೋಜನಾ ನಿರ್ದೇಶಕರು ಮೌನೇಶ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ವಿಜಯಕ್ಷ್ಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ವಿಜಯ್ ಕುಮಾರ್ ಹಾಗೂ ರೀಡ್ಸ್ ಸಂಸ್ಥೆಯ ಸಿಬ್ಬಂದಿ ವರ್ಗದವರು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.